ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ವಿಧಾನ ಪರಿಷತ್ನಲ್ಲಿ ಅಶ್ಲೀಲ ಪದ ಬಳಕೆ ಆರೋಪದಡಿ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದು ಕೋರಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.
ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಿಂದ ಈ ಮಹತ್ವದ ಆದೇಶ ಹೊರಬಿದ್ದಿದೆ.
ಕಳೆದ ಬೆಳಗಾವಿಯ ಚಳಿಗಾಲ ಅಧಿವೇಶನದ ಕೊನೆ ದಿನದಂದು ಹೆಬ್ಬಾಳ್ಳರ್ ವಿರುದ್ಧ ಪರಿಷತ್ ನಲ್ಲೇ ರವಿ ಅವರು ಅವಾಚ್ಯ ಶಬ್ದ ಬಳಸಿದ್ದ ಆರೋಪಡಿಯಲ್ಲಿ ಹಿರೇಬಾಗೇವಾಡಿ ಪೊಲೀಸರು ದಾಖಲಿಸಿದ್ದ ಪ್ರಕರಣದ ಕುರಿತು ವಿಚಾರಣೆ ನಡೆಸಲಾಗಿದೆ
ಸರ್ಕಾರವು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ವರದಿಯೂ ಆಗಿತ್ತು. 4 ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು 7 ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿ.19ರಂದು (2024) ಪರಿಷತ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಮಾತಿನ ಸಮರದ ವೇಳೆ ರವಿ ಅವರು ಸಚಿವೆ ಹೆಬ್ಬಾಳ್ಳರ್ ಅವರಿಗೆ ಅಸಂಸದೀಯ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ನಂತರದಲ್ಲಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.