ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನಿರ್ಮಾಣವಾಗಿ ಉದ್ಘಾಟನೆ ಭಾಗ್ಯ ಕಾಣದೆ ಇರುವ ಇಎಸ್ಐ (ESI) ಆಸ್ಪತ್ರೆ ಶೀಘ್ರವಾಗಿ ಆರಂಭಿಸಬೇಕೆಂದು ಕನ್ನಡ ಜಾಗೃತಿ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಕುರಿತಂತೆ ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್ ಎಂ. ದೊಡ್ಡಬಳ್ಳಾಪುರದಲ್ಲಿನ ನೂತನ ESI ಹಾಸ್ಪಿಟಲ್ ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಗಳು ಕಳೆದರೂ ಸಹ ಈ ಭಾಗದ ಕಾರ್ಮಿಕರಿಗೆ ಸೇವೆ ಸಿಗುತ್ತಿಲ್ಲ.
ಇಲ್ಲಿಯ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ESI ಹಾಸ್ಪಿಟಲ್ಗಾಗಿ ದೂರದ ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.
ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕಾರ್ಖಾನೆಗಳಿವೆ, ಮತ್ತು ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ನಮ್ಮ ದೊಡ್ಡಬಳ್ಳಾಪುರ ಇಂಡಸ್ಟ್ರಿಯ ಏರಿಯಾ ಏಷ್ಯಾದಲ್ಲಿ ಎರಡನೇ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ವಿಷಯ.
ಆದರೆ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಕೇಳುವವರು ಯಾರು ಇಲ್ಲ, ಇಲ್ಲಿನ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವವರು ಯಾರು ಇಲ್ಲದಂತಾಗಿದೆ.. ಅಲ್ಲದೆ ಈ ಭಾಗದಲ್ಲಿ ಅತಿ ಹೆಚ್ಚು ತೆರಿಗೆ ಸಂದಾಯ ಆಗುತ್ತದೆ ಎಂದು ತಿಳಿಸಿದರು.
ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಶಿಧರ್ ಸಿ, ESI ಹಾಸ್ಪಿಟಲ್ ಸೇವೆ ಪ್ರತಿಯೊಬ್ಬ ಕಾರ್ಮಿಕರಿಗೂ ಅತಿ ಮುಖ್ಯವಾಗಿದೆ. ಏಕೆಂದರೆ ಈ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಜನ ವಾಸಿಸುತ್ತಾರೆ. ಇವರ ಮಕ್ಕಳು ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಚಿಕಿತ್ಸೆ ಸೌಲಭ್ಯ ಸಿಗುತ್ತಿಲ್ಲ.
ಅಧಿಕಾರಿಗಳು ಹೆಚ್ಚೆತ್ತೆಮು ತಕ್ಷಣ ಇಎಸ್ಐ ಆಸ್ಪತ್ರೆಯನ್ನು ಆರಂಭವಾಗಬೇಕು.. ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಈ ವೇಳೆ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಸುರೇಶ್ ಸಿಂಗಂ, ತಾಲೂಕು ಉಪಾಧ್ಯಕ್ಷ ಮಹದೇವ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಶಿವಕುಮಾರ ಸ್ವಾಮಿ, ಮಂಜುನಾಥ್ ನಿಜಗಲ್ ಇದ್ದರು.