ಗುಂಟೂರು: ರ್ಯಾಲಿ ವೇಳೆ ಸಂಭವಿಸಿದ ರಸ್ತೆ ಅಪಘಾತ ಓರ್ವ ವ್ಯಕ್ತಿ ಸಾವನಪ್ಪಿರುವ ಪ್ರಕರಣದಲ್ಲಿ ವೈಎಸ್ಆರ್ಸಿಪಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್. ಸತೀಶ್ ಕುಮಾರ್ ತಿಳಿಸಿದ್ದಾರೆ.
ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಜಗನ್ ಮೋಹನ್ ರೆಡ್ಡಿ ಅವರ ಚಾಲಕ ರಮಣ ರೆಡ್ಡಿ, ಆಪ್ತ ಸಹಾಯಕ ಕೆ.ನಾಗೇಶ್ವರ ರೆಡ್ಡಿ, ವೈಎಸ್ಆರ್ಸಿಪಿ ಹಿರಿಯ ಮುಖಂಡ ವೈ.ವಿ ಸುಬ್ಬಾರೆಡ್ಡಿ, ಮಾಜಿ ಶಾಸಕ ಪೆರ್ಣಿ ವೆಂಕಟರಾಮಯ್ಯ, ಮಾಜಿ ಸಚಿವ ವಿಡದಲ ರಜಿನಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವೈಎಸ್ಆರ್ಸಿಪಿ ಕಾರ್ಯಕರ್ತನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಜಗನ್ ಅವರು, ಜೂನ್ 18ರಂದು ಪಲ್ನಾಡು ಜಿಲ್ಲೆಯ ರೆಂಟಪಲ್ಲ ಗ್ರಾಮಕ್ಕೆ ತೆರಳುತ್ತಿದ್ದರು.
ಗ್ರಾಮದಲ್ಲಿ ರ್ಯಾಲಿ ಆಯೋಜಿಸಲಾಗಿತ್ತು. ಯಾಲಿ ವೇಳೆ ಗುಂಟೂರು ನಗರದ ಹೊರವಲಯದ ಎಟುಕೂರು ಬಳಿ ಜಗನ್ ಅವರ ಬೆಂಗಾವಲು ವಾಹನಕ್ಕೆ ಸಿಲುಕಿ ಪಕ್ಷದ ಕಾರ್ಯಕರ್ತ ಚೀಲಿ ಸಿಂಗಯ್ಯ ಎಂಬುವವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಹಲವು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದ್ದು, ಚೀಲಿ ಸಿಂಗಯ್ಯ ( ಮೃತ ವ್ಯಕ್ತಿ) ಜಗನ್ ಅವರ ಬೆಂಗಾವಲು ವಾಹನದ ಚಕ್ರದ ಅಡಿಯಲ್ಲಿ ಸಿಲುಕಿರುವುದು ಕಂಡುಬಂದಿದೆ ಎಂದು ಗುಂಟೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಸತೀಶ್ ಕುಮಾರ್ ಭಾನುವಾರ ತಡರಾತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಿಂಗಯ್ಯ ಅವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಿಂಗಯ್ಯ ಅವರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಸಿಸಿಟಿವಿ ದೃಶ್ಯಾವಳಿಗಳು, ಡೋನ್ ದೃಶ್ಯಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ. ಸಿಂಗಯ್ಯ ಅವರ ಮೇಲೆ ಜಗನ್ ಅವರ ಬೆಂಗಾವಲು ಪಡೆ ವಾಹನ ಹರಿದಿದ್ದು, ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಪೊಲೀಸರು ಬಿಎನ್ಎಸ್ ಸೆಕ್ಷನ್ 105 (ಕೊಲೆಗೆ ಸಮಾನವಲ್ಲದ ನರಹತ್ಯೆ) ಮತ್ತು ಸೆಕ್ಷನ್ 49 (ಹತ್ಯೆಗೆ ಪ್ರೇರಣೆ) ಅಡಿಯಲ್ಲಿ ಪ್ರಕಣ ದಾಖಲಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.