ನವದೆಹಲಿ: ಕರ್ನಾಟಕ ಮಾವಿಗೆ ಆಂದ್ರಪ್ರದೇಶ ಚಂದ್ರಬಾಬು ನಾಯ್ಡು ಸರ್ಕಾರ ನಿಷೇಧ ಹೇರಿದ ಕಾರಣ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಮಾವು (Mango) ಬೆಳಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಹೌದು, ಮಾವು ಬೆಳಗೆ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಪತ್ರ ಬರೆದು ಮನವಿ ಮಾಡಿದ ಕೂಡಲೇ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಧನ್ಯವಾದ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದಿರುವ ಅವರು, ಈ ಬಗ್ಗೆ ತುರ್ತು ಕ್ರಮ ವಹಿಸಿ ರಾಜ್ಯ ಮಾವು ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಕೃಷಿ ಸಚಿವರಿಗೆ ಪತ್ರದ ಮೂಲಕ ವಿನಂತಿಸಿದ್ದರು.
ಕುಮಾರಸ್ವಾಮಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿದ ಕೃಷಿ ಸಚಿವರು, ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ 2025-2 6ನೇ ಸಾಲಿಗೆ ಅನ್ವಯ ಆಗುವಂತೆ 2,50,000 ಮೆಟ್ರಿಕ್ ಟನ್ ಮಾವನ್ನು ಪ್ರತೀ ಕ್ವಿಂಟಾಲ್ ಗೆ ₹1616 ರಂತೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು🙏
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2025
ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention… pic.twitter.com/WfQYq8PC5z
ಪತ್ರ ಬರೆದಿದ್ದ ಸಚಿವರು:
ಇದಕ್ಕೂ ಮುನ್ನ ಸಚಿವ ಕುಮಾರಸ್ವಾಮಿ ಅವರು, ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದರು.
ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಅವರು ಕೋರಿದ್ದರು.
ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
(ಸಾಂದರ್ಭಿಕ ಚಿತ್ರ ಬಳಸಲಾಗಿದೆ)