ಬೆಂಗಳೂರು: ಇತ್ತೀಚಿಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ವಿರುದ್ಧ ಸಿಟಿ ರವಿ (C.T.Ravi)ಅವರ ಅವಹೇಳನಾಕಾರಿ ಹೇಳಿಕೆ ಆರೋಪದಿಂದ ತೀವ್ರ ಮುಜುಗರಕ್ಕೆ ಒಳಗಾಗಿರುವ ರಾಜ್ಯ ಬಿಜೆಪಿ (BJP), ಬಳಿಕ ಎಂಎಲ್ಸಿ ರವಿ ಕುಮಾರ್ (Ravi Kumar) ಅವರು ಪದೇ ಪದೇ ಮಹಿಳಾ ಅಧಿಕಾರಿಗಳ ಕುರಿತು ಆಡುತ್ತಿರುವ ಬೇಜವಬ್ದಾರಿ ಮಾತು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ.
ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.
ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ.
ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕ್ಷಮೆಯಾಚನೆಗೆ ಪಟ್ಟು
ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.
ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.