ಬಳ್ಳಾರಿ: ಅಸಂಘಟಿತ ವಿವಿಧ ವಲಯಗಳಡಿ ದುಡಿಯುವ ಕಾರ್ಮಿಕರನ್ನು (laborers) ಗುರುತಿಸಿ ಅವರಿಗೆ ಸುರಕ್ಷತೆ ಮತ್ತು ವಿಶೇಷ ಸಾಮಾಜಿಕ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಧ್ಯೇಯೋದ್ದೇಶವಾಗಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ (Santosh Lad) ಅವರು ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಬಳ್ಳಾರಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸುಮಾರು ಶೇ.90 ರಷ್ಟು ಕಾರ್ಮಿಕರು ಅಸಂಘಟಿತ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸುಮಾರು ಶೇ.85 ರಷ್ಟು ಕಾರ್ಮಿಕರು ಇದ್ದಾರೆ. ದೇಶದ ಶೇ.50 ರಷ್ಟು ಜಿಡಿಪಿ ಯು ಅಸಂಘಟಿತ ವಲಯಗಳ ಕಾರ್ಮಿಕರ ಆದಾಯದಿಂದ ಬರುತ್ತದೆ. ಹಾಗಾಗಿ ಅವರ ಸುರಕ್ಷತೆ ಮತ್ತು ಸಾಮಾಜಿಕ ಭದ್ರತೆಯು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದರು.
ರಾಜ್ಯದಲ್ಲಿ 91 ಅಸಂಘಟಿತ ವರ್ಗಗಳಡಿಯ ಇ-ಶ್ರಮ ಪೋರ್ಟಲ್ ನಲ್ಲಿ ಸುಮಾರು 1.53 ಕೋಟಿ ಕಾರ್ಮಿಕರು ಕಂಡುಬಂದಿದ್ದಾರೆ.
ನೋಂದಾಯಿಸಿಕೊಂಡ ಅಸಂಘಟಿತ ಕಾರ್ಮಿಕರಿಗೆ ಈ ಯೋಜನೆಯಡಿ ಅಪಘಾತ ಪರಿಹಾರ ಸೌಲಭ್ಯ ಅಪಘಾತದಿಂದ ಮರಣ ಹೊಂದಿದಲ್ಲಿ, ಸಂಪೂರ್ಣ ದುರ್ಬಲತೆ ಹೊಂದಿದಲ್ಲಿ ಅವರ ನಾಮನಿದೇರ್ಶಿತರಿಗೆ 1 ಲಕ್ಷ ರೂ.ಪರಿಹಾರ, ಶಾಶ್ವತ ದುರ್ಬಲತೆ ಹೊಂದಿದರೆ ಮತ್ತು ತಾತ್ಕಾಲಿಕ ದುರ್ಬಲತೆ ಹೊಂದಿದರೆ ಆಸ್ಪತ್ರೆ ಚಿಕಿತ್ಸೆ ವೆಚ್ಚಕ್ಕಾಗಿ 1 ಲಕ್ಷ ರೂ.ವರೆಗೆ ಪರಿಹಾರ ಧನ ಸಹಾಯ ನೀಡಲಾಗುತ್ತದೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡಿಸೇಲ್ನಿಂದ ರಾಜ್ಯಕ್ಕೆ ಬರುವ ತೆರಿಗೆ ಸಂಗ್ರಹದಲ್ಲಿ ಕನಿಷ್ಟ ಶೇ.1 ರಷ್ಟು ಹಣವನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ನೀಡಬೇಕೆಂದು ಕೋರಲಾಗಿದೆ. ಮುಖ್ಯಮಂತ್ರಿಗಳ ಒಪ್ಪಿಗೆ ದೊರೆತಲ್ಲಿ, 1,500 ಕೋಟಿ ರೂ. ಸಂಗ್ರಹವಾಗಲಿದೆ ಅದನ್ನು ನೇರವಾಗಿ ಸ್ಮಾರ್ಟ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ರೂಪಿಸಿ ಅಧಿನಿಯಮವನ್ನು ಜಾರಿಗೊಳಿಸಿ 20 ವರ್ಗಗಳನ್ನು ಗುರುತಿಸಿ ಸೌಲಭ್ಯಗಳನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಡಿ ಅಪಘಾತದಿಂದ ಫಲಾನುಭವಿ ನಿಧನರಾದರೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ಎಂದು ಜಾರಿ ಮಾಡಿರುವುದು ಉತ್ತಮ ಕೆಲಸವಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆಗೆ ಅಭಿನಂದಿಸಿದರು.
ರಾಜ್ಯದ ಜನತೆಗೆ ವರ್ಷಕ್ಕೆ ನೇರವಾಗಿ 60 ಸಾವಿರ ಕೋಟಿ ರೂ. ನೀಡುತ್ತಿದ್ದು, ಐದು ವರ್ಷಕ್ಕೆ 3 ಲಕ್ಷ ಕೋಟಿ ನೀಡುವ ದೇಶದ ಏಕೈಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಮ್ಮ ಸರ್ಕಾರವಾಗಿದೆ. ‘ಕೆರೆಯ ನೀರನ್ನು ಕೆರೆಗೆ ಚೆಲ್ಲಿ’ ಎಂಬ ಗಾದೆಯಂತೆ ತೆರಿಗೆ ಹಣವನ್ನು ಜನರಿಗೆ ವಾಪಸ್ ನೀಡುತ್ತಿದ್ದೇವೆ ಎಂದು ಪ್ರತಿಪಾದಿಸಿದರು.
ಗಿಗ್ ಕಾರ್ಮಿಕರ ವಿಮಾ ಯೋಜನೆ
ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ತಲಾ 2 ಲಕ್ಷ ರೂ.ಗಳ ಅಪಘಾತ ಪರಿಹಾರ ಹಾಗೂ ಜೀವ ವಿಮಾ ಸೌಲಭ್ಯ ಸೇರಿದಂತೆ ಒಟ್ಟು 4 ಲಕ್ಷ ರೂ.ಗಳ ವಿಮಾ ಸೌಲಭ್ಯ ಒದಗಿಸುವ ‘ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ’ ಯನ್ನು ಜಾರಿಗೊಳಿಸಲಾಗಿದ್ದು, ಗಿಗ್ ಕಾರ್ಮಿಕರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಆಶಾ ದೀಪ ಕಾರ್ಯಕ್ರಮ
ದೇಶದಲ್ಲಿಯೇ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಆಶಾ ದೀಪ ಕಾರ್ಯಕ್ರಮ ಆರಂಭಿಸಲಾಗಿದ್ದು, ಇದರಲ್ಲಿ ಯಾವುದೇ ಉದ್ದಿಮೆದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಅಥವಾ ಅಪ್ರೆಂಟಿಸ್ ತರಬೇತಿ ನೀಡಿದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 2 ವರ್ಷದವರೆಗೆ ತಿಂಗಳ 7 ಸಾವಿರ ರೂ.ನಂತೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಡಿ ಸಹಾಯಧನ ನೀಡಲಾಗುವುದು. ಈ ನಿಟ್ಟಿನಲ್ಲಿ ತೋರಣಗಲ್ ನ KSW ಕಂಪನಿಗೆ 19 ಲಕ್ಷ ರೂ. ಚೆಕ್ ವಿತರಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ವೇತನವನ್ನು ಸೊಸೈಟಿ ರಚಿಸಿ ಜಿಲ್ಲಾಧಿಕಾರಿಗಳ ಮೂಲಕ ಪಾವತಿಸುವ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಬಡವರು ಮತ್ತು ಶೋಷಿತ ವರ್ಗದವರ ಪರ ಕಾಳಜಿ ಹೊಂದಿದ ಸರ್ಕಾರ ನಮ್ಮದು. ಈ ನಿಟ್ಟಿನಲ್ಲಿ ರಾಜ್ಯದ ಅಸಂಘಟಿತ ಕಾರ್ಮಿಕರ ಸುರಕ್ಷತೆ ಮತ್ತು ಭದ್ರತೆ ಒದಗಿಸುವ ಕಾರ್ಯವು ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯು ಮಾಡುತ್ತಿದೆ ಎಂದು ಹೇಳಿದರು.
ಸಂಸದ ಈ.ತುಕಾರಾಂ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಕರ್ನಾಟಕ ರಾಜ್ಯದ ‘ಕಾಯಕಯೋಗಿ’ ಸರ್ಕಾರವಾಗಿದೆ. ವಿಧಾನಸೌಧದ ಮುಂಭಾಗ ಇರುವ ‘ಸರ್ಕಾರಿ ಕೆಲಸ, ದೇವರ ಕೆಲಸ’ ಎಂಬ ನಾಣ್ಣುಡಿಯಂತೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ.
ರಾಜ್ಯದ ಲಕ್ಷಾಂತರ ಕಾರ್ಮಿಕರ ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಮತ್ತು ಅವರ ಮಕ್ಕಳನ್ನು ಶೈಕ್ಷಣಿಕವಾಗಿ ಬೆಳೆಸಲು ಕಾರ್ಮಿಕ ಇಲಾಖೆಯು ಅಗತ್ಯ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದು ಕಾರ್ಮಿಕರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.
ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ರೂಪಿಸಲಾಗಿದೆ. ಬೈಪಾಸ್ ರಸ್ತೆ ಕಾಮಗಾರಿ, ರೈಲ್ವೆ ಸೇತುವೆ ನಿರ್ಮಾಣ ಕಾರ್ಯಗಳನ್ನು ಪುನರ್ ಆರಂಭಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ರಿಂಗ್ ರೋಡ್ ಮಾಡುವ ಯೋಜನೆಯೂ ರೂಪಿಸಲಾಗಿದೆ ಎಂದು ತಿಳಿಸಿದರು.
ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್ ಅವರು ಮಾತನಾಡಿ, ಸಮಾಜದಲ್ಲಿ ವಂಚಿತರಾದ ವಿವಿಧ ಅಸಂಘಟಿತ ವಲಯಗಳ ಕಾರ್ಮಿಕರನ್ನು ಗುರುತಿಸಿ ಕಾನೂನಿನಾತ್ಮಕವಾಗಿರುವ ಹಲವು ಸೌಲಭ್ಯಗಳು ಮತ್ತು ಸಾಮಾಜಿಕ ಭದ್ರತೆಯನ್ನು ಅವರಿಗೆ ತಲುಪಿಸುವಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರ ಕಾರ್ಮಿಕ ಇಲಾಖೆಯು ಬಹಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ದೇಶದ ಆರ್ಥಿಕ ಬೆಳವಣಿಗೆಗೆ ಅಸಂಘಟಿತ ವಿವಿಧ ವಲಯಗಳ ಕಾರ್ಮಿಕರ ಕೊಡುಗೆಯು ಒಳಗೊಂಡಿದೆ. ಸಮಾಜದಲ್ಲಿ ಅವರಿಗೆ ಖಾಯಂ ಉದ್ಯೋಗಾವಕಾಶ ಇಲ್ಲದಿದ್ದರೂ ದಿನಕ್ಕೆ 14 ರಿಂದ 16 ತಾಸುಗಳ ವರೆಗೆ ದುಡಿಯುವ ಶ್ರಮಿಕ ವರ್ಗದವರಾಗಿದ್ದಾರೆ. ಅಂತಹ ಕುಟುಂಬಗಳನ್ನು ಗುರುತಿಸಿ ಸಾಮಾಜಿಕ ಭದ್ರತೆ ರೂಪಿಸಿ ತಲುಪಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಮುಖ್ಯವಾಗಿ ಕಾರ್ಮಿಕರಿಗಿರುವ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದರು.
ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಮಾತನಾಡಿ, ಬೆವರು ಮತ್ತು ಶ್ರಮದಿಂದ ಸಮಾಜ ಮುನ್ನೆಡೆಸುತ್ತಿರುವ ಕಾರ್ಮಿಕರ ಕೈಗಳನ್ನು ಬಲಪಡಿಸುವ ಮತ್ತು ಕಾರ್ಮಿಕರ ಕಷ್ಟ-ಕಾರ್ಪಣ್ಯಗಳನ್ನು ಅರಿಯುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಆರಂಭಕ್ಕೂ ಮುನ್ನ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಯಿತು. ಬಳಿಕ ಸಾಂಕೇತಿಕವಾಗಿ ವಿವಿಧ ವರ್ಗಗಳಡಿ ನೋಂದಾಯಿಸಿಕೊಂಡಿದ್ದ ಕಾರ್ಮಿಕರಿಗೆ ಸಚಿವರು ಮತ್ತು ಗಣ್ಯರು ಸ್ಮಾರ್ಟ್ ಕಾರ್ಡ್ ವಿತರಿಸಿದರು. ಇನ್ನುಳಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ವಿವಿಧ ವರ್ಗಗಳಡಿ ನೋಂದಾಯಿಸಿಕೊಂಡಿದ್ದ 2,400 ಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲು ವಾಲ್ಮೀಕಿ ಭವನದ ಆವರಣದಲ್ಲಿ 3 ಕೌಂಟರ್ ಗಳನ್ನು ಹಾಕಲಾಗಿತ್ತು. ಕಾರ್ಮಿಕರು ಸಾಲಾಗಿ ಬಂದು ಸ್ಮಾರ್ಟ್ ಕಾರ್ಡ್ ಪಡೆದುಕೊಂಡರು.
ನಂತರ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೇ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸುವುದು, ಚಿಕಿತ್ಸೆ ಹಾಗೂ ಸಲಹೆ ನೀಡಲು ಮೊದಲಾದ ಸೇವೆ ಒದಗಿಸುವ 3 ಅತ್ಯಾಧುನಿಕ ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಕಾರ್ಮಿಕ ಸಚಿವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಕಾರ್ಮಿಕ ಆಯುಕ್ತರು ಹಾಗೂ ರಾಜ್ಯ ವಿಮಾ ಯೋಜನಾ ವೈದ್ಯಕೀಯ ಸೇವೆಗಳ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ ರವಿಕುಮಾರ್, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ್ ನಾಯಕ್, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು, ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.