ದೊಡ್ಡಬಳ್ಳಾಪುರ: ವಸತಿ ಸಮುಚ್ಚಯ ಕಟ್ಟಡಗಳ (Transit Accommodation) ಉದ್ಘಾಟನೆಗೆಂದು ಇಂದು ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್ ಅವರಿಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿದರು.
ನಗರದ ಹೊರವಲಯದಲ್ಲಿರುವ ಓಬದೇನಹಳ್ಳಿ ಬಳಿ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ನಿರ್ಮಿಸಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ (Transit Accommodation) ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟನೆಗೆ ಸಚಿವರು ಆಗಮಿಸಿದ್ದರು.
ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಗೌಡ, ಮಲ್ಲೋಹಳ್ಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಕಸಬಾ ಬ್ಲಾಕ್ ಅಧ್ಯಕ್ಷ ಜಯಸಿಂಹ, ಯುವ ಮುಖಂಡರಾದ ನವೀನ್, ವಾಸಿಮ್, ಶಾಹಿದ್, ಲಕ್ಷ್ಮಣ್ ಇದ್ದರು.
ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನ

ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನ ಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
ರಾಜ್ಯದಲ್ಲಿ 91 ಅಸಂಘಟಿತ ವಲಯಗಳನ್ನು ಗುರ್ತಿಸಲಾಗಿದ್ದು ಕಾರ್ಮಿಕ ಇಲಾಖೆಯ ಮಂಡಳಿಗಳ ಮೂಲಕ ಹಲವು ಸೌಲಭ್ಯ ಒದಗಿಸುತ್ತಿದ್ದೇವೆ. ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ, ಅಪಘಾತ ಮದುವೆ ಸಹಾಯಧನ, ತಾಯಿ ಮಗು ಸಹಾಯ ಹಸ್ತ ಮುಂತಾದ ಸೌಲಭ್ಯಗಳು ನೀಡಲಾಗುತ್ತಿದೆ.
ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿಯಡಿ 23 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಅಸಂಘಟಿತ ವಲಯದ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು, ಪತ್ರಿಕಾ ವಿತರಕ ಕಾರ್ಮಿಕರು ಹಾಗೂ ಖಾಸಗಿ ವಾಣಿಜ್ಯ ಸಾರಿಗೆ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ.
ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ
ಕರ್ನಾಟಕ ಸರ್ಕಾರವು ರಾಜ್ಯದ ಗಿಗ್ ಕಾರ್ಮಿಕರಿಗಾಗಿ (ಸ್ವತಂತ್ರ ಉದ್ಯೋಗಿ) ವಿಶೇಷ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆನ್ಲೈನ್ ಮೂಲಕ ಸರಕು ಸೇವೆ ಒದಗಿಸುವು ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಫ್ಲಿಪ್ಕಾರ್ಟ್, ಬಿಗ್ಬಾಸ್ಕೆಟ್ ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದೆ.
ಅಪಘಾತಾದಲ್ಲಿ ಆಕಸ್ಮಿಕವಾಗಿ ಸತ್ತಿರುವವರಿಗೆ ಮೊದಲು ಅವರಿಗೆ 2ಲಕ್ಷ ನೀಡಲಾಗಿತ್ತಿತ್ತು, ಈಗ 5 ಲಕ್ಷ ಕೊಡುತ್ತಿದ್ದೇವೆ. ಇದರ ಉದ್ದೇಶ ಅವರ ಕುಟುಂಬಕ್ಕೆ ಆರ್ಥಿಕವಾಗಿ ಅವರ ಜೀವನ ನಡೆಸಲು ಆಸರೆಯಾಗಬೇಕು ಎನ್ನುವುದು ನಮ್ಮ ಆಶಯ, ಆದ್ದರಿಂದ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಆಶಾದೀಪ ಯೋಜನೆ
ರಾಜ್ಯ ಸರ್ಕಾರವು, ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಠಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ “ಆಶಾದೀಪ ಯೋಜನೆ ಜಾರಿಗೊಳಿಸಲಾಗಿದೆ.
ಈ ಯೋಜನೆಯಡಿ ಮಾಲೀಕರು ಪಾವತಿಸುವ ಇ.ಎಸ್.ಐ. ಮತ್ತು ಇ.ಪಿ.ಎಫ್. ವಂತಿಕೆ ಮರುಪಾವತಿ ಮಾಡಲಾಗುವುದು. ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಶಿಷ್ಯವೇತನ (Stipend) ಮರುಪಾವತಿ ಮಾಡಲಾಗುವುದು. ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಿ, ಸ್ವಾವಲಂಭಿಗಳಾಗಲು ಉತ್ತೇಜನ ನೀಡಲಾಗುತ್ತದೆ ಎಂದರು.
ದೊಡ್ಡಬಳ್ಳಾಪುರದಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಡ ನಿರ್ಮಾಣಗೊಂಡಿದ್ದ ಅದಕ್ಕೆ ಬೇಕು ಸೌಲಭ್ಯಗಳು ಮತ್ತು ಉಪಕರಣಗಳು ಸರಬರಾಜು ಮಾಡಬೇಕಿದೆ. ಹಾಗಾಗಿ ನಾವು ಕೇಂದ್ರ ಸರ್ಕಾರದ ಸಚಿವರೊಂದಿಗೆ ಇದರ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ವಸತಿ ಸಮುಚ್ಚಯಗಳನ್ನು ಉದ್ಘಾಟಿಸಿ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ವಿಶೇಷ ಸೌಲಭ್ಯಗಳನ್ನು ನಮ್ಮ ಸರ್ಕಾರ ನೀಡುತ್ತಿದ್ದ ಕಾರ್ಮಿಕರ ಸಚಿವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.
ಜಿಲ್ಲೆಯಾದ್ಯಂತ ಕೈಗಾರಿಕೆಗಳು ಬೃಹದಾಕಾರವಾಗಿ ಬಳೆಯುತ್ತಿವೆ. ಹಲವಾರು ಕುಟುಂಬಗಳು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಒಂದು ತರಬೇತಿ ಕೇಂದ್ರ ಸ್ಥಾಪಿಸಿದರೆ ಉತ್ತಮ. ಇದರಿಂದ ಹಲವು ಅಭ್ಯರ್ಥಿಗಳು ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಉದ್ಯೋಗ ಪಡೆಯುವಂತಾಗುತ್ತದೆ. ಇದರ ಬಗ್ಗೆ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಭಾರತಿ, ಸದಸ್ಯರಾದ ರಮೇಶ್, ಜಾನಿ, ಬಸಪ್ಪ, ಶ್ರೀಯಾನ್ಸ್, ವಿಜಯಕುಮಾರ್, ಕಾರ್ಮಿಕರ ಇಲಾಖೆ ಆಯುಕ್ತರಾದ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿಶ್ವನಾಥ ಸೇರಿದಂತೆ ಅಧಿಕಾರಿಗಳು, ಕಾರ್ಮಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.