ಬೆಂಗಳೂರು: ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಹಿಂದೂ ಹಾಗೂ ಮುಸ್ಲಿಂ ಯುವಕರ ಗುಂಪುಗಳ ನಡುವೆ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸಚಿವ ಎನ್.ಚಲುವರಾಯಸ್ವಾಮಿ (N. Chaluvarayaswamy) ಸ್ಪೋಟಕ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಕಡೆಯಿಂದ ಕಲ್ಲುಗಳನ್ನು ತೂರಿರುವ ಬಗ್ಗೆ ಮಾಹಿತಿ ಇದೆ. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ 21 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.
ಯಾವ ಹಿಂದೂಗಳ ಮೇಲೂ ಪ್ರಕರಣ ದಾಖಲಾಗಿಲ್ಲ. ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಮತ್ತೊಂದು ಪ್ರಕರಣ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ಪ್ರಚೋದನೆ
ಬಿಜೆಪಿಯ ಹಾಗೂ ಜೆಡಿಎಸ್ನ ಕೆಲವು ನಾಯಕರು ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದನ್ನು ಬಿಟ್ಟು, ಕೋಮುಗಲಭೆಗೆ ಪ್ರಚೋದನೆ ನೀಡಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ, ಹೊರಗಿನಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇದರ ಹಿಂದೆ ಯಾವುದೇ ಸಮಾಜದವರು ಇದ್ದರೂ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದ ಬಿಜೆಪಿ, ಜೆಡಿಎಸ್ನವರು ಪ್ರಚೋದನೆ ನೀಡುತಿದಾರೆ ಎಂದು ಮತ್ತೊಮ್ಮೆ ಆರೋಪಿಸಿದಾರೆ.
ನಾವು ಯಾರನ್ನೂ ಓಲೈಸುವ ಕೆಲಸ ಮಾಡುತ್ತಿಲ್ಲ. ಹಾಗೇನಾದರೂ ಇದ್ದಿದ್ದರೆ, 21 ಜನರನ್ನೇಕೆ ಬಂಧಿಸುತ್ತಿದ್ದವು ಎಂದು ಪ್ರಶ್ನಿಸಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಹಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಆಗುತ್ತಿಲ್ಲ. ಸದನದಲ್ಲಿ ನಮನ್ನು ಎದುರಿಸಲು ಆಗದು ಎಂಬ ಕಾರಣಕ್ಕೆ, ಇಂತಹ ಘಟನೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಹಿಂದೂ ಪರ ಸಂಘಟನೆಯವರಿಂದ ಕಲ್ಲು ತೂರಾಟ: ಪರಮೇಶ್ವರ
ಮತ್ತೊಂದೆಡೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ
ಸಮಯದಲ್ಲಿ ಕಲ್ಲು ತೂರಾಟ ನಡೆಸಿದವರ ಜತೆ ಹಿಂದೂ ಪರವಾದ ಸಂಘಟನೆಯವರು ಸೇರಿಕೊಂಡಿದ್ದಾರೆ. ಘಟನೆ ಕುರಿತು ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ತನಿಖೆಗೆ ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ಅದರಲ್ಲಿ ಯಾರೆಲ್ಲ ಸೇರಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಗೊತ್ತಿಲ್ಲ. ಹಿಂದೂ ಪರವಾದ ಸಂಘಟನೆಯವರು ಎಂದು ಪೊಲೀಸರು ಹೇಳುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಶಾಂತಿ ಕಾಪಾಡಲು ಪೊಲೀಸರು ಒಂದು ಹಂತದವರೆಗೆ ಪ್ರಯತ್ನಿಸಿದ್ದಾರೆ. ಸಂಘಟನೆಯವರ ಮನವೊಲಿಸಿದ್ದಾರೆ. ಅವರ ಕೈ ಮೀರಿದಾಗ ಲಾಠಿ ಪ್ರಹಾರ ಮಾಡಿದ್ದಾರೆ. ಈಗಾಗಲೇ ಬಂಧನಕ್ಕೆ ಒಳಗಾದವರು ಕಲ್ಲು ತೂರಾಟ ನಡೆಸಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.