ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ಕಿತ್ತೂರು ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಈ ಬಾರಿ ಕಿತ್ತೂರು ಉತ್ಸವವನ್ನು (Kittur utsava) ಮಾದರಿ ರೀತಿಯಲ್ಲಿ ಆಚರಿಸುವ ಯೋಜನೆಯಿದ್ದು, ಜನರು ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ( Satish Jarkiholi) ಅವರು ಕರೆ ನೀಡಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಿತ್ತೂರು ಉತ್ಸವ- 2025ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ಸವದಲ್ಲಿ ಸ್ಥಳೀಯರಿಗೆ ಅವಕಾಶ ಕಲ್ಪಿಸಿ, ಕಿತ್ತೂರಿನ ಸ್ಮಾರಕಗಳ ಸುಧಾರಣೆಗೊಳಿಸಿ, ದೀಪಾಲಂಕಾರ, ಸೇತುವೆ ಸ್ವಚ್ಛತೆ, ಬಸ್ ನಿಲ್ದಾಣದ ದುರಸ್ಥಿ ಕಾಮಗಾರಿ ಕೈಗೊಳ್ಳಲಾಗುವುದು. ಹೊಸ ಸಾಹಿತಿಗಳು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಬದಲಾವಣೆಗೆ ತಿಳಿಸಲಾಗಿದ್ದು, ಕಿತ್ತೂರು ಉತ್ಸವ ಮಾದರಿ ಉತ್ಸವವನ್ನಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದರು.
ಲೋಪದೋಷಗಳನ್ನು ಸರಿಪಡಿಸಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ವಿವಿಧ ಸಮಾನಾಂತರ ವೇದಿಕೆ ಕಾರ್ಯಕ್ರಮಗಳಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.
ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ ಅವರು ವೀರ ರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿ ಮೆರವಣಿಗೆಯಲ್ಲಿ ರೂಪಕ ವಾಹನಗಳ ಬದಲಾವಣೆ ಮಾಡುವ ಕುರಿತು ಸಾಧ್ಯವಾದಷ್ಟು ಪ್ರಯತ್ನಿಸಲಾಗುವುದು.
ವಿಚಾರ ಸಂಕೀರ್ಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗುವುದು. ಇತಿಹಾಸವನ್ನು ಹೊರ ತರುವ ನಿಟ್ಟಿನಲ್ಲಿ ಕಿತ್ತೂರು ಇತಿಹಾಸದ ಪುಸ್ತಕ, ಕೈಪಿಡಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಕಳೆದಬಾರಿ ಕಲಾವಿದರಿಗೆ ಹೆಚ್ಚು ಅವಕಾಶ ಸಿಗದ ಕಾರಣ ಈ ವರ್ಷದ ಉತ್ಸವದಲ್ಲಿ ಹೆಚ್ಚಿನ ಕಲಾವಿದರು ಭಾಗವಹಿಸಲು ಆಹ್ವಾನಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗುವುದು.
ಕಿತ್ತೂರಿಗೆ ಹೊಸ ಬಸ್ ಗಳು ಶೀಘ್ರದಲ್ಲೇ ಬರಲಿದ್ದು, ಇದರಿಂದ ಜನರಿಗೆ ಅನುಕೂಲವಾಗಲಿದೆ.
ಈಗಾಗಲೇ ಕಿತ್ತೂರು ಉತ್ಸವದ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿ ಸಭೆಗಳನ್ನು ಕರೆದು ಉತ್ಸವಕ್ಕೆ ಅಗತ್ಯವಿರುವ ರೂಪರೇಷಗಳನ್ನು ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ಅವರು ತಿಳಿಸಿದರು .
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಕಳೆದ ವರ್ಷ ಸಾರ್ವಜನಿಕರ ಸಲಹೆ ಪಡೆದು ಅವರ ಅನಿಸಿಕೆಯಂತೆ ಸಮಿತಿಗಳನ್ನು ರಚಿಸಿ ಉತ್ಸವಕ್ಕೆ ತಯಾರಿ ಮಾಡಿಕೊಳ್ಳಲಾಗಿತ್ತು. ಸರಿಸುಮಾರು 4 ಲಕ್ಷ ಜನರು ಕಳೆದ ವರ್ಷ ಉತ್ಸವದಲ್ಲಿ ಪಾಲ್ಗೊಂಡು ಕಿತ್ತೂರು ಉತ್ಸವ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿತ್ತು ಎಂದರು.
ಕಾಕತಿಯ ರಾಣಿ ಚನ್ನಮ್ಮವರ ಮನೆ ಇತರರ ಮಾಲ್ಕಿಯಾಗಿದ್ದು, ನೇರವಾಗಿ ಮಾತುಕತೆ ನಡೆಸಿ ಖರೀದಿಗೆ ಸಾದ್ಯವಾಗುತ್ತಿಲ್ಲ. ಹಾಗಾಗಿ ಕಿತ್ತೂರು ಪ್ರಾಧಿಕಾರದ ಮೂಲಕ ಭೂ-ಸ್ವಾಧೀನ ಪಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ತ ಮಹಾಸ್ವಾಮಿಗಳು ಮಾತನಾಡಿ ರಾಜ್ಯ ಸರ್ಕಾರ ಈ ಬಾರಿಯ ಕಿತ್ತೂರು ಉತ್ಸವವನ್ನು ಅತಿ ವಿಜೃಂಭಣೆಯಿಂದ ಆಚರಿಸಲು ಕಾಳಜಿವಹಿಸಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು.
ಸಾರ್ವಜನಿರು ಕೂಡ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಗುಡ್ಮಾರ್ನಿಂಗ್ ನ್ಯೂಸ್: ನಾಳೆಯಿಂದ ಆರಂಭವಾಗಲಿರುವ ಶಾಲೆಗಳ ಸಮಯ ಬದಲು.!
ಪ್ರತಿ ವರ್ಷ ಜಿಲ್ಲಾಡಳಿತದಿಂದ ಕಿತ್ತೂರು ಉತ್ಸವ ಅದ್ದೂರಿಯಾಗಿ ನಡೆಯಲಿದ್ದು, ಅದಕ್ಕೆ ಅವಶ್ಯವಿರುವ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತದೆ.
ಕಳೆದ ವರ್ಷ ಕಿತ್ತೂರು ಉತ್ಸವಕ್ಕೆ 5 ಕೋಟಿ ಅನುದಾನ ನೀಡಲಾಗಿತ್ತು ಅದೇ ರೀತಿಯಲ್ಲಿ 2025 ರಲ್ಲಿ ಕಿತ್ತೂರು ಉತ್ಸವಕ್ಕೆ 5 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಪ್ರಸ್ತಾವಿಕವಾಗಿ ಮಾತನಾಡಿದರು.
kitturu utsava: ಸಾರ್ವಜನಿಕರ ಸಲಹೆಗಳು
ಕಳೆದ ವರ್ಷದಂತೆ ವೀರಜ್ಯೋತಿಯು ರಾಜ್ಯದಾದ್ಯಂತ ಸಂಚರಿಸಲು ಕ್ರಮ ಕೈಗೊಳ್ಳಬೇಕು; ಉತ್ಸವದ ಸಂದರ್ಭದಲ್ಲಿ ಚರಂಡಿ ಸ್ವಚ್ಛತೆ, ವಿದ್ಯುತ್ ಮತ್ತು ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು.
ಕಿತ್ತೂರು ಉತ್ಸವಕ್ಕೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ನಿಯಮಾನುಸಾರ ಟೆಂಡರ್ ಆಹ್ವಾನಿಸಿ, ಉತ್ಸವದ ತಯಾರಿ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕರು ಸಲಹೆಗಳನ್ಙು ನೀಡಿದರು.
ಅದೇ ರೀತಿಯಲ್ಲಿ ಗುತ್ತಿಗೆದಾರರಿಗೆ ಸಕಾಲದಲ್ಲಿ ಬಿಲ್ ಪಾವತಿಸಬೇಕು; ಕಿತ್ತೂರು ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಇಲ್ಲದ ಕಾರಣ ಶಾಲಾ ಮಕ್ಕಳಿಗೆ ತೊಂದರೆ ತೊಂದರೆಯಾಗುತ್ತಿದೆ ಹಾಗಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು.
ಉತ್ಸವದ ಸಂದರ್ಭದಲ್ಲಿ ರಸ್ತೆ ಬದಿಯ ಸಿಸಿ ಟಿವಿಗಳು ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡರು.
ಸ್ಥಳೀಯ ಹಿರಿಯ ನಾಗರಿಕರೊಬ್ಬರು ಮಾತನಾಡಿ, ಈಗಾಗಲೇ ಕಿತ್ತೂರು ತಾಲೂಕು ಘೋಷಣೆಯಾಗಿ ವರ್ಷಗಳೇ ಕಳೆದಿವೆ ಆದರೂ ಸಹ ತಾಲೂಕಿಗೆ ಸಾಕಷ್ಟು ಕಚೇರಿಗಳು ಸ್ಥಳಾಂತರವಾಗದೆ ಬೈಲಹೊಂಗಲ ತಾಲೂಕಿನಲ್ಲಿವೆ.
ಕಿತ್ತೂರಿನ ಸಾರ್ವಜನಿಕರಿಗೆ ದಿನನಿತ್ಯ ಕಚೇರಿ ವ್ಯವಹಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಸಾರ್ವಜನಿಯರಿಗೆ ಅತಿ ಜರೂರಿ ಕಚೇರಿಗಳನ್ನು ಕಿತ್ತೂರಿಗೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡರು.
ಕಿತ್ತೂರು ನಾಡಿನ ಹೋರಾಟವನ್ನು ಇಂದಿನ ಮಕ್ಕಳಿಗೆ ತಿಳಿಸುವ ನಿಟ್ಟಿನಲ್ಲಿ ಕಿತ್ತೂರು ಇತಿಹಾಸದ ಕುರಿತು ಜ್ಞಾನ ಇರುವ ಸಾಹಿತಿಗಳನ್ನು ಉತ್ಸವಕ್ಕೆ ಆಹ್ವಾನಿಸಬೇಕು.
ಪ್ರತಿ ವರ್ಷ ಸುತ್ತಮುತ್ತ ಊರುಗಳಿಂದ ಉತ್ಸವಕ್ಕೆ ಜನರು ಸಾಕಷ್ಟು ಪ್ರಮಾಣದಲ್ಲಿ ಆಗಮಿಸುತ್ತಾರೆ ಹಾಗಾಗಿ ಸುತ್ತಮುತ್ತಲಿನ ಊರುಗಳ ರಸ್ತೆ ಅಗಲೀಕರಣ ಜೊತೆಗೆ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು ಎಂದು ಯುವ ಮುಖಂಡರೊಬ್ಬರು ಸಲಹೆ ನೀಡಿದರು.
“ನಮ್ಮ ಚಿತ್ತ ಶತಕದತ್ತ” ಕೈಪಿಡಿ ಬಿಡುಗಡೆ: kitturu utsava
ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು 2025 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ “ನಮ್ಮ ಚಿತ್ತ ಶತಕದತ್ತ” ಅಂತ ಎಂಬ ಕೈಪಿಡಿ ಬಿಡುಗಡೆ ಗೊಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ,
ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್, ಕಿತ್ತೂರು ತಹಶೀಲ್ದಾರ್ ಕಲಗೌಡ ಪಾಟೀಲ.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ಕೆ. ಎಚ್ ಚನ್ನೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.