ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (M.B. Patila) ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಯೋಜನಾ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ.
11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್.
ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ.
ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಅವರು ಹೇಳಿದ್ದಾರೆ.
ಅಕ್ಕಪಕ್ಕದ ರಾಜ್ಯಗಳಲ್ಲಿರುವ ವ್ಯವಸ್ಥೆ ಬಗ್ಗೆ ಅಧ್ಯಯನ
ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ರಾಜ್ಯವನ್ನು ಇಡೀ ದೇಶದಲ್ಲೇ ನಂ.1 ಮಾಡಲಾಗುವುದು. ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.
ನಾನಾ ಇಲಾಖೆಗಳಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ನಿರ್ದೇಶನ ನೀಡಿ, ವರದಿ ಕೊಡುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಇದನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ, ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಸಂಪುಟ ಸಭೆ ತೀರ್ಮಾನದಂತೆ ಪ್ರತಿಯೊಂದು ಕೈಗಾರಿಕಾ ಅನುಮೋದನೆಗಳಿಗೂ ಕಾಲಮಿತಿಯನ್ನು ನಿಗದಿ ಪಡಿಸಲಾಗುತ್ತದೆ. ಇದನ್ನು ಮೀರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯವರು ಎಚ್ಚರಿಕೆ ನೀಡಿದ್ದಾರೆ ಎಂದರು.
ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದಂತೆ ನೆರೆಹೊರೆಯ ತೆಲಂಗಾಣ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಯಾವ್ಯಾವ ಕೆಲಸಗಳಿಗೆ ಎಷ್ಟೆಷ್ಟು ದಿನಗಳಲ್ಲಿ ಒಪ್ಪಿಗೆ ಕೊಡಲಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ಚರ್ಚಿಸಿದರು.
ಇಂತಹ ವಿಚಾರಗಳಲ್ಲಿ ಭೂ ಬಳಕೆಯ ಉದ್ದೇಶ ಬದಲಾವಣೆ, ವಿದ್ಯುತ್ ಸೌಲಭ್ಯ, ಮರ ಕಡಿಯಲು/ ಸ್ಥಳಾಂತರಕ್ಕೆ ಒಪ್ಪಿಗೆ, ನೀರಿನ ಪೂರೈಕೆ, ಅಗ್ನಿಶಾಮಕ ಇಲಾಖೆಯ ಒಪ್ಪಿಗೆ, ಕೈಗಾರಿಕೆಗಳ ನೋಂದಣಿ ಮತ್ತು ಲೈಸೆನ್ಸ್, ಬಾಯ್ಲರ್ ನೋಂದಣಿ, ಲಿಫ್ಟ್ ಬಳಕೆಗೆ ಲೈಸೆನ್ಸ್ ಮುಂತಾದವು ಇವೆ.
ಆ ರಾಜ್ಯಗಳಲ್ಲಿ ಈ ಸೇವೆಗಳನ್ನು ಕನಿಷ್ಠ 7 ದಿನಗಳಿಂದ ಹಿಡಿದು ಗರಿಷ್ಠ 66 ದಿನಗಳಲ್ಲಿ ಒದಗಿಸಲಾಗುತ್ತಿದೆ. ಆದರೆ ರಾಜ್ಯದಲ್ಲಿ ಇವುಗಳ ಪೈಕಿ ಕೆಲವಕ್ಕೆ ಕನಿಷ್ಠ 20 ದಿನಗಳಿಂದ ಗರಿಷ್ಠ 120 ದಿನಗಳು ಹಿಡಿಯುತ್ತಿವೆ. ಇದನ್ನೆಲ್ಲ ಬಗೆಹರಿಸುವಂತೆ ಮುಖ್ಯಮಂತ್ರಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಮುಖ್ಯವಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆಯಿಂದ ವಿಪರೀತ ವಿಳಂಬವಾಗುತ್ತಿದೆ ಎಂದು ಹೂಡಿಕೆದಾರರು ಹೇಳುತ್ತಿದ್ದಾರೆ. ಇದನ್ನು ತಪ್ಪಿಸಲು ಹೂಡಿಕೆದಾರರ ಸಮಾವೇಶದಲ್ಲಿ ಬಿಡುಗಡೆ ಮಾಡಿದ, ಮೈಕ್ರೋಸಾಫ್ಟ್ ಕಂಪನಿ ರೂಪಿಸಿರುವ ಅತ್ಯಾಧುನಿಕ ಏಕಗವಾಕ್ಷಿ ಪೋರ್ಟಲ್ ಅಡಿ 20 ಇಲಾಖೆಗಳ 115 ಸೇವೆಗಳನ್ನು ತರಲಾಗಿದೆ. ಆದರೆ ಮುದ್ರಾಂಕ ಮತ್ತು ನೋಂದಣಿ, ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಮಿಕ ಇಲಾಖೆ, ಅಗ್ನಿಶಾಮಕ ಸೇವೆ, ಬಿಡಿಎ, ಕಂದಾಯ, ಔಷಧ ನಿಯಂತ್ರಣ, ಕೆಐಎಡಿಬಿ, ಬಿಎಂಆರ್ ಡಿಎ ಮುಂತಾದ ಇಲಾಖೆಗಳ ಇನ್ನೂ 29 ಸೇವೆಗಳು ಬಾಕಿ ಇವೆ. ಇವುಗಳನ್ನೂ ಶೀಘ್ರದಲ್ಲೇ ಏಕಗವಾಕ್ಷಿ ಅಡಿಗೆ ತರಬೇಕಾದ ತುರ್ತಿನ ಬಗ್ಗೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸಭೆಯಲ್ಲಿ ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ಕೈಗಾರಿಕಾ ರಂಗದಲ್ಲಿ ನಮಗೆ ಗುಜರಾತ್, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಒಡಿಶಾ ಮತ್ತು ಉತ್ತರಪ್ರದೇಶದಿಂದ ತೀವ್ರ ಸ್ಪರ್ಧೆ ಇದೆ. ಹೂಡಿಕೆದಾರರಿಗೆ ಸಮಯವೇ ಹಣವಿದ್ದಂತೆ. ನಾವು ಅನುಮೋದನೆ ಇತ್ಯಾದಿಗಳನ್ನು ವಿಳಂಬ ಮಾಡಿದರೆ ರಾಜ್ಯಕ್ಕೆ ನಷ್ಟವಾಗುತ್ತದೆ. ಇದಕ್ಕೆ ತೆರೆ ಎಳೆಯಲು ತೀರ್ಮಾನಿಸಲಾಗಿದೆ ಎಂದು ಪಾಟೀಲ ನುಡಿದಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.