ದೊಡ್ಡಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಎನ್.ಡಿ.ಆರ್.ಎಫ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಮೂರನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಅಕ್ಟೋಬರ್ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನ (Chemical spill mock-up) ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಇಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಅಣುಕು ಪ್ರದರ್ಶನ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಧಿಕಾರಿಗಳು ಹಾಗೂ ಕೈಗಾರಿಕಾ ಮುಖ್ಯಸ್ಥರ ಜೊತೆ ಪೂರ್ವ ಭಾವಿ ಸಭೆ ನಡೆಸಿ ಅಣುಕು ಪ್ರದರ್ಶನಕ್ಕೆ ಯಾವುದೇ ಲೋಪದೋಷ, ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಆ ದಿನ ಖುದ್ದು ಹಾಜರಿದ್ದು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.
ಸಾರ್ವಜನಿಕರಿಗೆ ಅರಿವು
ಆಕಸ್ಮಿಕವಾಗಿ ಸಂಭವಿಸಬಹುದಾದ ಅತಿವೃಷ್ಟಿ, ಅನಾವೃಷ್ಟಿ, ಬೆಂಕಿ ಅವಘಡ ಮುಂತಾದ ಪ್ರಕೃತಿ ವಿಕೋಪಗಳ ಜೊತೆಗೆ ಕೈಗಾರಿಕಾ ಪ್ರದೇಶಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಜಿಲ್ಲಾಡಳಿತ ಕರ್ತವ್ಯಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಲಕಾಲಕ್ಕೆ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.
ಸಭೆಯಲ್ಲಿ ಕಾರ್ಖಾನೆಗಳು ಹಾಗೂ ಬಾಯ್ಲರ್ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರ್, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಸಾಶಿ ಕಾರ್ಖಾನೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.