ದೊಡ್ಡಬಳ್ಳಾಪುರ: ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli town panchayat election) ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರದಂದು ಒಂದೇ ದಿನ 47 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 82 ನಾಮಪತ್ರಗಳು ಸಲ್ಲಿಕೆಯಾಗಿವೆ.
19 ವಾರ್ಡ್ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಂತಿಮವಾಗಿ ಬಿಜೆಪಿಯಿಂದ 24, ಕಾಂಗ್ರೆಸ್ನಿಂದ19, ಜೆಡಿಎಸ್ನಿಂದ 14 ಹಾಗೂ ಪಕ್ಷೇತರರಾಗಿ 25ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಒಂದೇ ದಿನ 19 ವಾರ್ಡ್ಗಳಿಗೂ ನಾಮಪತ್ರಗಳನ್ನು ಸಲ್ಲಿಸಿದ್ದು ವಿಶೇಷವಾಗಿತ್ತು. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ್ದರಿಂದ ಚುನಾವಣಾಧಿಕಾರಿಗಳ ಕಚೇರಿಯ ಮುಂದೆ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಗೂ ಬೆಂಬಲಿಗರ ದಂಡೇ ನೆರೆದಿತ್ತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಡಿ.10 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿಸೆಂಬರ್ 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಕಾಂಗ್ರೆಸ್ ನಿಂದ ಶಕ್ತಿ ಪ್ರದರ್ಶನ: ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರ ಮೆರವಣಿಗೆ
ಬಾಶೆಟ್ಟಿಹಳ್ಳಿಯ ಬ್ಯಾಂಕ್ ವೃತ್ತದ ಬಳಿಯಿಂದ ಚುನಾವಣಾಧಿಕಾರಿಗಳ ಕಚೇರಿಯವರೆಗೆ ಕಾಂಗ್ರೆಸ್ ಪಕ್ಷದ 19 ಅಭ್ಯರ್ಥಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಮೆರವಣಿಗೆಯಲ್ಲಿ ತೆರಳಿ, ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರಗಳನ್ನು ಸಲ್ಲಿಸಿದರು.

ಪಕ್ಷದ ಬಾವುಟಗಳನ್ನು ಹಿಡಿದ ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆಗಳನ್ನು ಕೂಗಿ, ಮೆರವಣಿಗೆಯಲ್ಲಿ ತೆರಳಿದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ರಾಜ್ಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನೀಡುತ್ತಿದ್ದು,ನೂತನವಾಗಿ ಅಸ್ತಿತ್ವಕ್ಕೆ ಬಂದಿರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಕೆಪಿಸಿಸಿ ಸದಸ್ಯರಾದ ಜಿ.ಲಕ್ಷ್ಮೀಪತಿ, ಬಿ.ಜಿ.ಹೇಮಂತ ರಾಜು, ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಟಿಎಪಿಎಂಸಿಎಸ್ ಸದಸ್ಯ ವಿಶ್ವಾಸ್ ಹನುಮಂತೇಗೌಡ, ಮುಖಂಡರಾದ ಕೆ.ಎಂ.ಕೃಷ್ಣಮೂರ್ತಿ, ಆದಿತ್ಯ ನಾಗೇಶ್, ವಿಶ್ವನಾಥ್, ಎಳ್ಳುಪುರ ರಾಮಾಂಜಿನಪ್ಪ, ಆಂಜಿನ ಮೂರ್ತಿ, ಜವಾಜಿ ರಾಜೇಶ್ ಮೊದಲಾದವರು ಹಾಜರಿದ್ದರು.
ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ: ನಾಲ್ವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ದೊಡ್ಡಬಳ್ಳಾಪುರ ನಗರಸಭೆಯ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ನ ಚುನಾವಣೆಗೆ ಈವರೆಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳವಾರ ಪಕ್ಷೇತರರಾಗಿ ರಘುನಂದನ್ ನಾಮಪತ್ರ ಸಲ್ಲಿಸಿದರು. ಈ ಮೊದಲು ಬಿಜೆಪಿಯಿಂದ ಜಿ.ಜೆ.ನವೀನ್, ಕಾಂಗ್ರೆಸ್ ನಿಂದ ಕೆ.ಜಿ.ದಿನೇಶ ಹಾಗೂ ಪಕ್ಷೇತರರಾಗಿ ಹೇಮಂತ್ ಕುಮಾರ್.ಜಿ.ಆರ್
ನಾಮಪತ್ರ ಸಲ್ಲಿಸಿದ್ದರು.
ಒಟ್ಟು ನಾಲ್ವರು ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ.