ಬೆಂ.ಗ್ರಾ.ಜಿಲ್ಲೆ: ಸರ್ಕಾರಿ ನೌಕರರು ದೈನಂದಿನ ವೃತ್ತಿಯ ಜೊತೆಗೆ ಕ್ರೀಡೆ, ವ್ಯಾಯಾಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯ ವೃದ್ಧಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ಜೀವನದಲ್ಲಿ ಆರೋಗ್ಯ ಮತ್ತು ದೇಹದ ಸದೃಢತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ, ದೈನಂದಿನ ಜೀವನದಲ್ಲಿ ಗುಣಮಟ್ಟದ ಆಹಾರ ಸೇವನೆ ಜೊತೆಗೆ ಕ್ರೀಡೆ, ವ್ಯಾಯಾಮ, ಯೋಗದಲ್ಲಿ ನೋಡಿಕೊಳ್ಳಬೇಕು. ಸರ್ಕಾರಿ ನೌಕರರು ಕೆಲಸ ಕೆಲವು ಸಂದರ್ಭಗಳಲ್ಲಿ ಒತ್ತಡದಿಂದ ಕೂಡಿರಬಹುದು, ಒತ್ತಡದ ಜೀವನ ನಿವಾರಣೆಗೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಇದರಿಂದ ಉತ್ತಮ ಪ್ರಜೆ ಆಗಲು, ಕೆಲಸದ ಮೇಲಿನ ಆಸಕ್ತಿ ಹೆಚ್ಚಾಗಲಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕು. ಸರ್ಕಾರಿ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು.
ದೇವನಹಳ್ಳಿ ಟೌನ್ ಕ್ರೀಡಾಂಗಣ ಅಭಿವೃದ್ಧಿಗೆ 13.5 ಕೋಟಿ ನಿಗದಿ ಮಾಡಲಾಗಿದೆ, ಒಂದು ವರ್ಷದೊಳಗೆ ಆಧುನಿಕ ಕ್ರೀಡಾಂಗಣವಾಗಿ ಅಭಿವೃದ್ಧಿ ಆಗಲಿದೆ. ಇದರಿಂದ ನಗರವಾಸಿಗಳಿಗೆ ಅನುಕೂಲವಾಗಲಿದೆ.
ಹಾಗೇಯೇ ವಿಜಯಪುರ ರಸ್ತೆಯಲ್ಲಿ ಇರುವ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಸುಧಾಕರ್ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಅದನ್ನು ಕೂಡ ರಾಷ್ಟ್ರ ಮಟ್ಟದ ಕ್ರೀಡಾಂಗಣವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.
ದೊಡ್ಡಬಳ್ಳಾಪುರ ಆದಿನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ 25 ಕೋಟಿ ರೂ.ಗಳು ಮಂಜೂರು ಆಗಿದೆ. ಶೀಘ್ರ ಶಿಲಾನ್ಯಾಸ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹನುಮಂತರಾಯಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಉಪಸ್ಥಿತರಿದ್ದರು.