ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು (Tractor Chalo) ಹಮ್ಮಿಕೊಳ್ಳಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ.
ಇದರ ಮುಂದುವರಿದ ಭಾಗವಾಗಿ ಇಂದು (ಮಾ.31) ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 100 ಟ್ಯಾಕ್ಟರ್ ಗಳು ಬರಲಿವೆ ಎಂದು ಅಂದಾಜಿಸಲಾಗಿದೆ.
ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂಬುದು ರೈತರ ಆಕ್ರೋಶವಾಗಿದೆ.
ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು.
ಈಗಾಗಲೇ ಶಾಸಕ ಧೀರಜ್ ಮುನಿರಾಜದ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಸೇರಿದಂತೆ ಚನ್ನರಾಯಪಟ್ಟಣ ರೈತ ಹೋರಾಟಗಾರು, ವಿವಿಧ ಸಂಘಟನೆಗಳ ಪ್ರಮುಖರು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ಸರ್ಕಾರವು ರೈತರಿಗೆ ಹಿಂಸೆ ನೀಡಿ ಬಲವಂತವಾಗಿ ಭೂಮಿ ಕಬಳಿಕೆ ಮಾಡಲು ಮುಂದಾಗಿದೆ.. ಬೇರೆ ದೇಶಗಳ ಕಂಪನಿಗಳಿಗೋಸ್ಕರ ನಮ್ಮ ಫಲವತ್ತಾದ ಜಮೀನು ಕಬಳಿಕೆ ಮಾಡಲಾಗುತ್ತಿದೆ.. ನಮ್ಮ ಊಟದ ತಟ್ಟೆಯನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ. ಎಲ್ಲೂ ಸಹ ಬಲವಂತವಾಗಿ ಭೂಮಿ ಕಸಿದುಕೊಳ್ಳಬಾರದು ಎಂಬುದು ರೈತರ ಒತ್ತಾಯವಾಗಿದೆ.