ಬೆಂ.ಗ್ರಾ.ಜಿಲ್ಲೆ: ಉತ್ತರಾಖಂಡ್ (Uttarakhand) ರಾಜ್ಯ ದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಗುರುವಾರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ ಅವರು ಜಿಲ್ಲಾ ಪಂಚಾಯತ್ ಅಡಿಯಲ್ಲಿ ಬರುವ ಪಂಚಾಯಿತಿಯ ಜಿಲ್ಲಾ, ತಾಲ್ಲೂಕು, ಗ್ರಾಮ ಹಂತಗಳು, ಕೂಸಿನ ಮನೆ, ನರೇಗಾ, ಇ-ಸ್ವತ್ತು, ಗ್ರಾಮಗಳ ಸ್ವಚ್ಛತಾ ಕಾರ್ಯ ಮತ್ತು ತ್ಯಾಜ್ಯ ವಿಲೇವಾರಿ ಘಟಕ (ಸ್ವಚ್ಛ ಭಾರತ್ ಮಿಷನ್), ಅರಿವು ಕೇಂದ್ರಗಳು(ಗ್ರಂಥಾಲಯ), ಅಮೃತ ಸರೋವರ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಗಳ ಬಗ್ಗೆ ವಿವರವಾಗಿ ಮಾಹಿತಿಯನ್ನು ಪಿಪಿಟಿ ಮೂಲಕ ಪ್ರಸ್ತುತ ಪಡಿಸಿದರು.
ನಂತರ ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿಯ ಸೇವೆಗಳು ಕುರಿತು ಮಾಹಿತಿ ಪಡೆದು, ಘನತ್ಯಾಜ್ಯ ವಿಲೇವಾರಿ ಘಟಕ, ಅರಿವು ಕೇಂದ್ರ, ಕೂಸಿನ ಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ನಗರಸಭೆಗೆ ಭೇಟಿ ನೀಡಿ ಆಡಳಿತ ವೈಖರಿ, ಕಾರ್ಯವಿಧಾನ, ಆದಾಯ ವಿಧಾನ, ತೆರಿಗೆ, ಕ್ರಿಯಾ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಮಲ್ಲೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.