
ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ); ವಿರೋಧ ಪಕ್ಷಗಳ ವಿರೋಧದ ನಡುವೆಯೂ 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ (Hate Speech) ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವು ಬೆಳಗಾವಿ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಈ ವಿಧೇಯಕವನ್ನು ಮಂಡಿಸಿದ್ದು, ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಕೋರಿದರು. ಈ ವಿಧೇಯಕವು ವಿಧಾನಸಬೆಯಲ್ಲಿ ಅಂಗೀಕಾರವಾಯಿತು.
ಈ ಕಾಯ್ದೆ ಅನ್ವಯ ವ್ಯಕ್ತಿ ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರಕ್ಕೆ ಕಡಿವಾಣ ಬೀಳಲಿದೆ.
ಈ ರೀತಿಯ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂಬುದು ಸರ್ಕಾರದ ಮಾತಾಗಿದೆ.
ವಿರೋಧ ಪಕ್ಷಗಳ ಕಳವಳ
ಆದರೆ ವಿರೋಧ ಪಕ್ಷಗಳು ಈ ಕಾಯ್ದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ. ವ್ಯಂಗ್ಯಚಿತ್ರಕಾರರು ಕೂಡ ಚಿತ್ರ ಬಳಸುವಂತಿಲ್ಲ. ಮಾಧ್ಯಮಗಳು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುದ್ದಿ ಮಾಡಿದರೆ ಪತ್ರಕರ್ತರಿಗೆ ಜಾಮೀನು ಸಿಗುವುದಿಲ್ಲ.
ಪೊಲೀಸ್ ಇಲಾಖೆ ಸ್ವೇಚ್ಛಾಚಾರದಿಂದ ವರ್ತನೆ ಮಾಡಲು ಇದು ಅವಕಾಶ ಮಾಡಿಕೊಡುತ್ತದೆ. ತುರ್ತು ಪರಿಸ್ಥಿತಿ ತಂದವರಿಂದ ಹೆಚ್ಚೇನು ಅಪೇಕ್ಷಿಸಲು ಸಾಧ್ಯವಿಲ್ಲ.
ಪತ್ರಿಕಾ ಸ್ವಾತಂತ್ರ್ಯ ನಾಶವಾಗಿದೆ. ಇದು ಮತಬ್ಯಾಂಕ್ ರಾಜಕಾರಣಕ್ಕೆ ಬಳಕೆಯಾಗಲಿದೆ. ಯಾರನ್ನು ಬೇಕಾದರೂ ಜೈಲಿಗೆ ಹಾಕಬಹುದು ಅಥವಾ ಡಿಜಿಟಲ್ ಮಾಧ್ಯಮದಲ್ಲಿ ಬರುವ ವಿಷಯಗಳನ್ನು ಕೂಡಲೇ ಬ್ಲಾಕ್ ಮಾಡಬಹುದು. ಕಾನೂನು ಗಾಳಿಗೆ ತೂರಿರುವುದು ಮಸೂದೆಯಲ್ಲಿ ಕಂಡುಬಂದಿದೆ ಎಂದು ಆರೋಪಿಸಿವೆ.