ದೊಡ್ಡಬಳ್ಳಾಪುರ: ನಗರದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಮತ್ತು ತಾಲೂಕು ಕೈಗಾರಿಕೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಉದ್ಯೋಗ ಮೇಳವನ್ನ (Job fair) ಆಯೋಜಿಸಲಾಗಿತ್ತು.
ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ (K.H. Muniyappa), ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಜಮೀನು ನೀಡಿದ ರೈತರ ಮಕ್ಕಳಿಗೆ ಕಂಪನಿಗಳು ಉದ್ಯೋಗಾವಕಾಶದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಅತಿಹೆಚ್ಚು ಕೈಗಾರಿಕಾ ಪ್ರದೇಶ ಹೊಂದಿರುವ ಭಾಗ ದೊಡ್ಡಬಳ್ಳಾಪುರ ಆಗಿದೆ. ಸುಮಾರು 10,000 ಸಾವಿರ ಎಕರೆ ಜಮೀನು ಕೈಗಾರಿಕಾ ಪ್ರದೇಶಕ್ಕೆ ಒಳಪಟ್ಟಿದೆ. ಆದ್ದರಿಂದ, ಭೂ ವಂಚಿತ ಕುಟುಂಬಗಳಿಗೆ ಸೌಲಭ್ಯ ಕಲ್ಪಿಸಬೇಕು. ಉದ್ಯೋಗ ಆಕಾಂಕ್ಷಿಗಳು ಯಾವುದೇ ರೀತಿಯ ತರಬೇತಿ ಪಡೆಯಬೇಕಾದಲ್ಲಿ ಜಿಲ್ಲಾಡಳಿತಕ್ಕೆ ಸಂಪರ್ಕಸಿಬಹುದಾಗಿದೆ. ಅಗತ್ಯವಿರುವ ತರಬೇತಿ ನೀಡಲು ಸರ್ಕಾರ ಸಿದ್ಧವಿದೆ. ತಾಲೂಕಿನಲ್ಲಿ ಉದ್ಯೋಗ ಮೇಳ ಅಯೋಜನೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಮುಂದಿನ ದಿನದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಏರ್ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಡಿಪ್ಲೊಮಾ ಕಾಲೇಜು ಸ್ಥಾಪನೆಗೆ ಮನವಿ
ಶಾಸಕ ಧೀರಜ್ ಮುನಿರಾಜು ಮಾತನಾಡಿ, ತಾಲೂಕಿನಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಕೀರ್ತಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪಾತ್ರವಾಗಿದೆ. ಈಗಾಗಲೇ 10,000ಕ್ಕು ಹೆಚ್ಚು ಉದ್ಯೋಗ ಅವಕಾಶಗಳಿವೆ. ಸರ್ಕಾರದ ವತಿಯಿಂದ ದೊಡ್ಡಬಳ್ಳಾಪುರಕ್ಕು ಡಿಪ್ಲೊಮಾ ಕಾಲೇಜು ಮಂಜೂರಾತಿಯಾದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.
ಕಂಪನಿಗಳಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳು ಇದ್ದು, ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಕಾಲೇಜು ತೆರೆಯುವುದರಿಂದ ಓದಿನ ನಂತರ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರಲ್ಲದೇ, 6 ತಿಂಗಳಿಗೊಮ್ಮೆ ಪ್ರತಿ ತಾಲೂಕಿನಲ್ಲಿ ಉದ್ಯೋಗ ಮೇಳ ನಡೆಸಬೇಕು ಎಂದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಎಸಿ ದುರ್ಗಾಶ್ರೀ, ಕೈಗಾರಿಕಾ ಜಂಟಿ ಅಧಿಕಾರಿ ನರೇಂದ್ರ ಬಾಬು,ಡಿವೈಎಸ್ಪಿ ಪಾಂಡುರಂಗ, ತಹಶೀಲ್ದಾರ್ ಮಲ್ಲಪ್ಪ ಯರಗೋಳ, ಜಿಲ್ಲಾ ಕೌಶಲ್ಯಾಭಿವೃಧಿ ಅಧಿಕಾರಿ ಜಗನ್ನಾಥ, ಪ್ರಾಂಶುಪಾಲರು ಸದಾಶಿವ ರಾಮ ಚಂದ್ರಗೌಡ, ಸೇರಿದಂತೆ ಕಂಪನಿಗಳ ಪ್ರತಿನಿಧಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಇದ್ದರು.