ಕಲಬುರಗಿ: ಸೇಡಂ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು, ಗುರುವಾರ ಸಂಜೆ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ರೈತ ವಿರೋಧಿ ಧೋರಣೆ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಮಾಡಿದ ಅನ್ಯಾಯಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸೇಡಂಗೆ ಸುಸಜ್ಜಿತ ಆಸ್ಪತ್ರೆ ಇಲ್ಲ: ಸಚಿವರ ವಿರುದ್ಧ ಆಕ್ರೋಶ
ಸೇಡಂ ಕ್ಷೇತ್ರದ ಶಾಸಕ ಶ್ರೀ ಶರಣಪ್ರಕಾಶ ಪಾಟೀಲ್ ಅವರು ಈ ಹಿಂದೆ ಮೂರು ಬಾರಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು. ಆದರೆ ತಮ್ಮ ಸ್ವಂತ ಕ್ಷೇತ್ರ ಸೇಡಂಗೆ ಒಂದು ಸುಸಜ್ಜಿತ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲು ಅವರಿಗೆ ಸಾಧ್ಯವಾಗಿಲ್ಲ. ಇಲ್ಲಿನ ಜನರು ತುರ್ತು ಚಿಕಿತ್ಸೆಗೆ ಕಲಬುರಗಿ ಅಥವಾ ಹೈದರಾಬಾದ್ಗೆ ಹೋಗಬೇಕಾದ ದುಸ್ಥಿತಿ ಇದೆ. ಜನರ ಆರೋಗ್ಯಕ್ಕಿಂತ ಇವರಿಗೆ ರಾಜಕೀಯವೇ ಮುಖ್ಯವಾಗಿದೆ” ಎಂದು ಕಿಡಿಕಾರಿದರು.
ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬ – ಪ್ರಜಾಪ್ರಭುತ್ವಕ್ಕೆ ಅಪಚಾರ
ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಆದೇಶ ನೀಡಿದ್ರೂ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತಿಲ್ಲ. ಒಂದಲ್ಲ ಒಂದು ಸಬೂಬು ಹೇಳಿ ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ. ಚುನಾವಣೆ ನಡೆಯದೆ ಇರೋದ್ರಿಂದ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯವಸ್ಥೆಯೇ ಇಲ್ಲದಂತಾಗಿದೆ. ಜೆಡಿಎಸ್ ಈ ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸುತ್ತದೆ” ಎಂದು ಆಗ್ರಹಿಸಿದರು.
ಸೇಡಂ CCI ಕಂಪನಿ ಬಂದ್ – ನೂರಾರು ಕುಟುಂಬಗಳು ಬೀದಿಗೆ
ಸೇಡಂ ಭಾಗದ ಪ್ರಮುಖ ಕೈಗಾರಿಕೆಯಾಗಿದ್ದ CCI ಕಂಪನಿಯನ್ನು ಈ ಸರ್ಕಾರ ಬಂದ್ ಮಾಡಿಸಿದೆ. ಇದರಿಂದ ನೂರಾರು ಕಾರ್ಮಿಕರು, ಅವರ ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿವೆ. ಕಲ್ಯಾಣ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ಮಾಡಬೇಕಾದ ಸರ್ಕಾರ, ಇರುವ ಉದ್ಯೋಗವನ್ನೇ ಕಿತ್ತುಕೊಳ್ಳುತ್ತಿದೆ. ಈ ವಿಷಯವನ್ನು ನಾನು ವೈಯಕ್ತಿಕವಾಗಿ ಕೇಂದ್ರ ಸಚಿವರಾದ ಕುಮಾರಣ್ಣನವರ ಗಮನಕ್ಕೆ ತಂದು, ಕಂಪನಿ ಪುನರಾರಂಭಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ” ಎಂದು ಭರವಸೆ ನೀಡಿದರು.
ಗ್ಯಾರಂಟಿ ಯೋಜನೆಗಳಿಗೆ SCP-TSP ಹಣ ದುರ್ಬಳಕೆ
ಕೇಂದ್ರ ಸಚಿವರಾದ ಕುಮಾರಣ್ಣ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ ಅನ್ನದಾತರ ನೆರವಿಗೆ ನಿಂತರು. ಆದರೆ ಇಂದು 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಒತ್ತಡ ಇಲ್ಲದಿದ್ದರೂ, ತಮ್ಮ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ SCP-TSP ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ದಲಿತರು, ಆದಿವಾಸಿಗಳಿಗೆ ಮಾಡುತ್ತಿರುವ ದೊಡ್ಡ ದ್ರೋಹ” ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ
ರಾಜ್ಯದಲ್ಲಿ ಬೇಸಿಗೆಯ ಹಿನ್ನೆಲೆ ತೀವ್ರ ನೀರಿನ ಸಮಸ್ಯೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆಗಳು ಹಾಳಾದಾಗ ಮುಖ್ಯಮಂತ್ರಿಗಳು ಕಾಟಾಚಾರಕ್ಕೆಂದು ಒಮ್ಮೆ ಬಂದು ಭೇಟಿ ನೀಡಿ ಹೋದರು. ಆದರೆ ‘ಸಂಕಷ್ಟದಲ್ಲಿರುವ ರೈತರ ಜೊತೆಗೆ ಸರ್ಕಾರ ಇದೆ’ ಎಂಬ ಒಂದು ಭರವಸೆಯ ಮಾತನ್ನೂ ಆಡಲಿಲ್ಲ. ನಾನು ಆ ಸಂದರ್ಭದಲ್ಲಿ ಈ ಭಾಗದ ರೈತರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದೆ. ರೈತರ ಕಣ್ಣೀರು ಒರೆಸುವ ಕೆಲಸವನ್ನು ಈ ಸರ್ಕಾರ ಮಾಡುತ್ತಿಲ್ಲ” ಎಂದು ಟೀಕಿಸಿದರು.
ಮಹಿಳಾ ಮೀಸಲಾತಿ ಬಿಲ್ಗೆ ಕಾಂಗ್ರೆಸ್ ವಿರೋಧ
“ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಪಾಸ್ ಮಾಡಲು ಮುಂದಾದಾಗ, ಕಾಂಗ್ರೆಸ್ ಪಕ್ಷ ಅದನ್ನು ತಿರಸ್ಕರಿಸಿದೆ. ಈಗ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ಕೊಟ್ಟು ‘ಸಬಲೀಕರಣ ಮಾಡಿದ್ದೇವೆ’ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಹಿಳೆಯರನ್ನು ನಿಜವಾಗಿ ಸಬಲೀಕರಣಗೊಳಿಸಿದವರು ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರು. ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ 50% ಮೀಸಲಾತಿ ಜಾರಿಗೆ ತಂದು, ಗ್ರಾಮ ಪಂಚಾಯಿತಿಯಿಂದ ಲೋಕಸಭೆಯವರೆಗೆ ಮಹಿಳೆಯರು ನಾಯಕತ್ವ ವಹಿಸಲು ದಾರಿ ಮಾಡಿಕೊಟ್ಟರು. 2 ಸಾವಿರ ಭಿಕ್ಷೆ ಅಲ್ಲ, ಅಧಿಕಾರ ಹಂಚಿಕೆಯೇ ನಿಜವಾದ ಸಬಲೀಕರಣ” ಎಂದು ಪ್ರತಿಪಾದಿಸಿದರು.
25 ವರ್ಷಗಳ ಜನಸೇವೆ – ಮುಂದೆಯೂ ಮುಂದುವರಿಯಲಿದೆ
ಜನತಾ ದಳ ಪಕ್ಷ 25 ವರ್ಷಗಳಿಂದ ಜನರ ಸೇವೆ ಮಾಡುತ್ತಾ ಬಂದಿದೆ. ರೈತರು, ದಲಿತರು, ಹಿಂದುಳಿದ ವರ್ಗಗಳು, ಮಹಿಳೆಯರು, ಯುವಕರ ಏಳಿಗೆಗಾಗಿ ದುಡಿದಿದೆ. ಮುಂದೆಯೂ ಇದೇ ರೀತಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಜೆಡಿಎಸ್ ಬದ್ಧವಾಗಿ ಕೆಲಸ ಮಾಡಲಿದೆ” ಎಂದು ಘೋಷಿಸಿದರು.
ಪ್ರಧಾನಿ ಮೋದಿಯವರಿಗೆ ದೇವೇಗೌಡರ ಬೆಂಬಲ
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಆಡಳಿತ ವೈಖರಿ, ದೇಶದ ಅಭಿವೃದ್ಧಿಗೆ ಅವರು ಕೈಗೊಂಡಿರುವ ಕ್ರಮಗಳನ್ನು ಮೆಚ್ಚಿ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರು ಅವರಿಗೆ ಬೆಂಬಲ ಸೂಚಿಸಿದ್ದಾರೆ. ರಾಷ್ಟ್ರ ಹಿತದ ವಿಚಾರದಲ್ಲಿ ಜೆಡಿಎಸ್ ಸದಾ ದೇಶದ ಜೊತೆ ನಿಲ್ಲುತ್ತದೆ” ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ ಕೃಷ್ಣಾರೆಡ್ಡಿ, ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್, ರಾಜ ವೆಂಕಟಪ್ಪ ನಾಯಕ್, ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ: ತಿಂಗಳ ಮೊದಲ ದಿನವೇ ಶಾಕ್.. ವಾಣಿಜ್ಯ LPG ಸಿಲಿಂಡರ್ ಬೆಲೆ ರೂ. 993 ಹೆಚ್ಚಳ..!

