ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ರೋಜೀಪುರ ಗ್ರಾಮದ ಸರ್ವೇ 115ರಲ್ಲಿ ತಿಗಳೇಭಾಗಾಯ್ತು ಸರ್ಕಾರಿ ಸ್ಥಳಕ್ಕೆ ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ನಗರಸಭೆಗೆ ದೂರು ನೀಡಿದ್ದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಂಗಾಧರಪುರ ಗ್ರಾಮದ ನಿವಾಸಿ ಜಿ.ವೆಂಕಟೇಶ್ ದೂರಿದ್ದಾರೆ.
ಅವರು ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನಗರಸಭೆ ವ್ಯಾಪ್ತಿಯಲ್ಲಿನ ಹಲವಾರು ನಗರಸಭೆ ಸ್ವತ್ತುಗಳನ್ನು ಖಾಸಗಿ ವ್ಯಕ್ತಿಗಳು ಕಬಳಿಸುತ್ತಿದ್ದರು ಸಹ ಅಧಿಕಾರಿಗಳು ಕಂಡೂ ಕಾಣದಂತೆ ಇದ್ದಾರೆ. ರೋಜಿಪುರ ಗ್ರಾಮದ ಮುಖ್ಯ ರಸ್ತೆಯುದ್ದಕ್ಕೂ ಇರುವ ಸರ್ಕಾರಿ ಸ್ಥಳದ ಇಂದಿನ ಮಾರುಕಟ್ಟೆ ಮೌಲ್ಯ ಸುಮಾರು ರೂ15 ಕೋಟಿ ಆಗಲಿದೆ. ಈ ಬಗ್ಗೆ 2017ರಿಂದಲೂ ನಗರಸಭೆ ಪೌರಾಯುಕ್ತರಿಂದ ತಹಸೀಲ್ದಾರ್, ಜಿಲ್ಲಾಧಿಕಾರಿಗಳವರೆಗೂ ದಾಖಲೆಗಳ ಸಮೇತ ದೂರುಗಳನ್ನು ಸಲ್ಲಿಸಿ ಅಕ್ರಮವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸುವ ಅಥವಾ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವಂತೆ ಮನವಿ ಮಾಡುತ್ತಲೇ ಬರುತ್ತಿದ್ದೇನೆ. ಆದರೆ ಈ ಬಗ್ಗೆ ಇದುವರೆಗೂ ಯಾರೊಬ್ಬ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ದಾಖಲೆಗಳ ಸಮೇತ ದೂರು ನೀಡಿದ್ದರು ನಕಲಿ ದಾಖಲೆಗಳನ್ನು ಸೃಷ್ಠಿಸಿ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು.
ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿರುವ ನಗರಸಭೆ ಪೌರಾಯುಕ್ತರು ಹಾಗೂ ಸರ್ಕಾರಿ ಸ್ಥಳದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ದೂರು ನೀಡಿದ್ದರು ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಲೋಕೋಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಲಾಗುವುದು ಎಂದರು.

