ದೊಡ್ಡಬಳ್ಳಾಪುರ: ತಾಲೂಕು ಪಂಚಾಯಿತಿ, ಬೆಂ.ಗ್ರಾ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಕಾರ್ಯನಿರ್ವಹಣಾಧಿಕಾರಿ ಟಿ.ಮುರುಡಯ್ಯ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.
ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು.
ಸಂಪನ್ಮೂಲ ಮೂಲ ವ್ಯಕ್ತಿಗಳಾದ ನ್ಯಾಯವಾದಿ ಎಚ್.ಎಂ.ಮಧುಸೂದನ್, ನ್ಯಾಯವಾದಿ ಶಾಂತಲ ಸಂವಿಧಾನ ರಚನೆಯ, ಕರುಡು ರಚನಾ ಸಮಿತಿಯ ಕುರಿತು ವಿವರಿಸಿದರು.
ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಬೈರೇಗೌಡ ಮಾತನಾಡಿ, ರಾಜಕೀಯ ಪ್ರೇರಿತ ವ್ಯಕ್ತಿಗಳಿಂದ ಅಧಿಕಾರಿಗಳನ್ನು ರಕ್ಷಿಸಲು ಸಂವಿಧಾನದ ಆಶಯ. ಬಡ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಅಧಿಕಾರಿಗಳ ಜವಬ್ದಾರಿ. ಪ್ರತಿಯೊಬ್ಬರಿಗೂ ಹಕ್ಕು, ಮತ್ತು ಜವಬ್ದಾರಿಯನ್ನು ಅರಿತು ವರ್ತಿಸಬೇಕಿದೆ.ಇಲ್ಲವಾದಲ್ಲಿ ಕಾನೂನಿನಲ್ಲಿ ಶಿಕ್ಷೆಗೆ ಒಳಗಾಗಲಿದ್ದಾರೆ. ಮೂಲಭೂತ ಜವಬ್ದಾರಿ ಅರಿತು ವರ್ತಿಸಿದಲ್ಲಿ ಕಾನೂನಿನಿಂದ ರಕ್ಷಣೆ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ದ್ರಾಕ್ಷಾಯಿಣಿ, ಸಹಾಯಕ ನಿರ್ದೇಶಕ ಗಂಗರಾಜು ಸೇರಿದಂತೆ ವಿವಿಧ ಗ್ರಾಪಂ ಪಿಡಿಒಗಳು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

