ಬೆಂಗಳೂರು: ವಿಕಲಚೇತನರಿಗೆ ರಕ್ಷಣೆ ಒದಗಿಸಲೆಂದು ಸಂವಿಧಾನದಡಿಯಲ್ಲಿ ವಿಶೇಷ ಕಾಯ್ದೆಗಳನ್ನು ಜಾರಿಗೆ ತಂದಿದ್ದು, ವಿಕಲಚೇತನರು ಕಾಯ್ದೆಗಳು ಹಾಗೂ ಸೌಲಭ್ಯಗಳ ಪ್ರಯೋಜನ ಪಡೆಯುವ ಮೂಲಕ ಸಮಾಜದಲ್ಲಿ ಸಬಲರಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಆರ್.ನಟೇಶ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿಂದು ಏರ್ಪಡಿಸಲಾಗಿದ್ದ “ವಿಶ್ವ ವಿಕಲಚೇತನರ ದಿನಾಚರಣೆ-2020ರ ಸಮಾರಂಭವನ್ನು” ಉದ್ಘಾಟಿಸಿ ಅವರು ಮಾತನಾಡಿದರು.ಯಾರೊಬ್ಬರೂ ಮೊದಲೇ ನಿರ್ಧರಿಸಿ ಜನ್ಮ ಪಡೆಯುವುದಿಲ್ಲ. ಹಲವು ಕಾರಣಗಳಿಂದ ನ್ಯೂನತೆ ಉಂಟಾಗಿದ್ದು ನಮಗೆ ಬಂದಿರುವುದು ಸ್ವೀಕರಿಸುವುದು ಅನಿವಾರ್ಯ ಎಂದರಲ್ಲದೆ, ಸಂವಿಧಾನದ 14 ಮತ್ತು 15 ನೇ ವಿಧಿಗಳು ವಿಶೇಷಚೇತನರಿಗೆ ರಕ್ಷಣೆ ನೀಡುತ್ತವೆ ಎಂದು ತಿಳಿಸಿದರಲ್ಲದೆ, ವಿಕಲಚೇತನರ ವಿಶೇಷ ಕಾಯ್ದೆಯನ್ನು 2016ರಲ್ಲಿ ಜಾರಿಗೆ ತರಲಾಗಿದ್ದು, ಆಸಿಡ್ ದಾಳಿಗೆ ಸಿಲುಕಿದವರನ್ನು ಈ ಕಾಯ್ದೆಯಡಿ ಸೇರಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಿಕಲಚೇತನರಲ್ಲಿನ ನ್ಯೂನತೆ ಗುರಿಯಾಗಿಸಿ,ಯಾರಾದರೂ ಅವಮಾನಿಸಿದ್ದಲ್ಲಿ ಅಂತಹರ ವಿರುದ್ಧ ತಹಶೀಲ್ದಾರ್ ಅಥವಾ ಪೋಲಿಸರಿಗೆ ದೂರು ನೀಡಿದರೆ ಸಮಸ್ಯೆ ಪರಿಹರಿಸಲಾಗುವುದು ಎಂದರಲ್ಲದೆ, ಇಂತಹ ಪ್ರಕರಣಗಳಲ್ಲಿ ಅಪರಾಧಿಗೆ 6 ತಿಂಗಳ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ವಿಕಲಚೇತನರು ಮಾನಸಿಕವಾಗಿ ಕುಗ್ಗದೆ, ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಮಾನಸಿಕ ಸ್ಥೈರ್ಯ ಮತ್ತು ಧೈರ್ಯ ಬೆಳಸಿಕೊಳ್ಳಬೇಕು ಎಂಬ ಉದ್ದೇಶದಿಂದ ಹಲವು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು ಮಾಧ್ಯಮಗಳು ವರದಿ ಮತ್ತು ಲೇಖನಗಳನ್ನು ಪ್ರಕಟಿಸಿ ಇತರರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಎಮ್.ನಾಗರಾಜ ಅವರು ಮಾತನಾಡಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ 1992ರಿಂದ ಪ್ರತಿ ವರ್ಷ ವಿಶ್ವ ವಿಕಲಚೇತನರ ದಿನಾಚರಣೆ ಆಚರಿಸಲಾಗುತ್ತಿದ್ದು, ಒಬ್ಬಂಟಿ ಎಂಬ ಕೊರಗಬೇಡಿ, ಇಡೀ ವಿಶ್ವವೇ ನಿಮ್ಮ ಜೊತೆ ನಿಂತಿದೆ ಎಂದು ತಿಳಿಸಿದರು.
ವಿಕಲಚೇತನರಿಗೆ ಕೇಂದ್ರ, ರಾಜ್ಯ, ಸ್ಥಳೀಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಬಳಸಿಕೊಳ್ಳುವುದರ ಜೊತೆಗೆ ವಿದ್ಯಾಭ್ಯಾಸ, ಸಾಧಿಸುವ ಛಲ ಇದ್ದರೆ ಎಲ್ಲವನ್ನೂ ಸಾಧಿಸಬಹುದು ಎಂದರಲ್ಲದೆ, ಶೀಘ್ರವೇ ಜಿಲ್ಲಾಧಿಕಾರಿಗಳ ಬಳಿ ಚರ್ಚಿಸಿ ಜಿಲ್ಲಾಡಳಿತ ಭವನದಲ್ಲಿ ವಿಕಲಚೇತನ ಸ್ನೇಹಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಭರವಸೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು ಮಾತನಾಡಿ, ಸಾಧನೆಗೆ ಯಾವುದೇ ಲೋಪ-ದೋಷ ಅಡ್ಡ ಬರುವುದಿಲ್ಲ, ಮನಸ್ಸು ಹಿಡಿತದಲ್ಲಿದ್ದು, ದೂರದೃಷ್ಟಿ ಮತ್ತು ಒಳ್ಳೆಯ ಆಲೋಚನೆ ಇದ್ದರೆ ಯಾವುದೂ ಅಸಾಧ್ಯವಲ್ಲ ಎಂದು ಹೇಳಿದರಲ್ಲದೆ, ಸಾಧನೆಯ ಹಾದಿಯಲ್ಲಿ ಎಲ್ಲರೂ ನಡೆಯಬೇಕು, ಕೋವಿಡ್-19 ಕಾರಣದಿಂದ ಕಾರ್ಯಕ್ರಮ ಸರಳವಾಗಿ ಆಚರಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಆಚರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ವಿಕಲಚೇತನರನ್ನು ಸ್ವಾವಲಂಬಿಯಾಗಿಸಿ, ಸಮಾಜದ ಮುಖ್ಯವಾಹಿನಿಗೆ ತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಇಲಾಖೆಯ ಸೌಲಭ್ಯಗಳನ್ನು ಪಡೆಯಲು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ವಿಕಲಚೇತನರಿಗೆ ಸನ್ಮಾನಿಸಿ, ಬಹುಮಾನ ವಿತರಿಸಿ, ಹಲವು ಪರಿಕರಗಳನ್ನು ನೀಡಲಾಯಿತು. ತಾಲ್ಲೂಕು ನೋಡಲ್ ಅಧಿಕಾರಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ

