ಬೆಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗುವುದರ ಜೊತೆಗೆ ಗುಣಮುಖವಾಗುತ್ತಿರುವ ಸಂಖ್ಯೆಯು ಹೆಚ್ಚುತ್ತಿದ್ದು ಉತ್ತಮ ಬೆಳವಣಿಗೆ ಆಗಿದೆ. ಆದರೂ ನಿರ್ಲಕ್ಷ್ಯವಹಿಸದೆ, ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡದೆ, ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪಿ.ಹೇಮಲತ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತ ಹಾಗೂ ಜಿಲ್ಲೆಯ ಇತರೆ ಇಲಾಖೆಗಳ ವಿಷಯಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಅಂಕಿ-ಅಂಶಗಳ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗೆ ಉಸ್ತುವಾರಿ ಕಾರ್ಯದರ್ಶಿಗಳು ಕೇಳಿದಾಗ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಧರ್ಮೇಂದ್ರ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗಳು ಹೆಚ್ಚಿದಂತೆ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿತ್ತು. ಅಕ್ಟೋಬರ್ ಮಾಹೆಯಲ್ಲಿ ಸೋಂಕಿತರ ಸಂಖ್ಯೆ ಅಧಿಕವಾಗಿತ್ತು. ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದರೊಂದಿಗೆ, ಗುಣಮುಖವಾಗುತ್ತಿರುವ ಸಂಖ್ಯೆಯು ಹೆಚ್ಚಾಗಿದ್ದು, ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ ಹಾಗೂ ಕೋವಿಡ್ ಲಸಿಕೆ ಶೇಖರಣೆಗೆ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ವರದಿಯಾಗಲು ಕಾರಣ ಕೇಳಿದಾಗ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ ದೊಡ್ಡಬಳ್ಳಾಪುರದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಕೈಗಾರಿಕೆಗಳು, ಗಾರ್ಮೆಂಟ್ಸ್ಗಳು ಹಾಗೂ ಕೈಮಗ್ಗಗಳ ಕೈಗಾರಿಕೆ ಹೆಚ್ಚಾಗಿರುವ ಹಿನ್ನೆಲೆ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚು ಹಾಗೂ ಧೂಳು, ಪ್ರದೂಷಣೆಯಿಂದಾಗಿ ಉಸಿರಾಟದಂತಹ ಸಮಸ್ಯೆಯ ಪ್ರಕರಣಗಳಿಂದಾಗಿ ಕೋವಿಡ್-19 ಸೋಂಕಿತರ ಸಂಖ್ಯೆ ಕೂಡ ಈ ಭಾಗದಲ್ಲಿ ಹೆಚ್ಚಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬೆಳೆ ಹಾಗೂ ಮಳೆಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಅಧಿಕಾರಿ ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗಿರುವುದರಿಂದ ಜಿಲ್ಲೆಯ ಪ್ರಮುಖ ಬೆಳೆ ರಾಗಿ ಫಸಲು ಕೂಡ ಉತ್ತಮವಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬೆಳವಣಿಗೆಯಿಂದ ರಾಗಿ ಕಟಾವು ಮಾಡುವ ಯಂತ್ರೋಪಕರಣಗಳು ಮಾರುಕಟ್ಟೆಗೆ ಬಂದಿದ್ದು, ಹಳ್ಳಿಗಳಲ್ಲೂ ಬಹಳಷ್ಟು ಜನರು ಇವುಗಳನ್ನು ಬಳಸಿಕೊಂಡು ಕೃಷಿ ಕೆಲಸ ಮಾಡುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೇಳಿ ಬರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದಾಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ದೊಡ್ಡಬಳ್ಳಾಪುರ ಹಾಗೂ ನೆಲಮಂಗಲದಲ್ಲಿ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೆಲವೆಡೆ ನೀರಿನ ಟ್ಯಾಂಕರುಗಳ ಮೂಲಕ ನೀರು ಪೂರೈಸಲಾಗುತ್ತಿದೆ, ಕೆಲವೆಡೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸಲಾಗುತ್ತಿದೆ ಎಂದರಲ್ಲದೆ, ನೆಲಮಂಗಲದಲ್ಲಿ ನೀರಿನ ಮೂಲವಿರುವ ಗ್ರಾಮ ಪಂಚಾಯಿತಿಗಳಿಂದ ಪೈಪ್ಲೈನ್ ಮೂಲಕ ಗ್ರಾಮಗಳಿಗೆ ನೀರನ್ನು ಪೂರೈಸಲು ಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ ಸೇರಿದ ಕೆಲವು ಗ್ರಾಮಗಳಲ್ಲಿ ಈ ಹಿಂದೆ ಬಿ.ಬಿ.ಎಂ.ಪಿ. ಅವರು ತ್ಯಾಜ್ಯವನ್ನು ಸುರಿದಿದ್ದು, ತ್ಯಾಜ್ಯವೀಗ ಅಂತರ್ಜಲವನ್ನು ಕಲುಷಿತಗೊಳಿಸಿ, ಕುಡಿಯಲು ಯೋಗ್ಯವಲ್ಲದ ನೀರನ್ನು ಸೇವಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿಯವರು ಸಭೆಯಲ್ಲಿ ತಿಳಿಸಿದಾಗ, ಈ ಕುರಿತು ರಾಜ್ಯ ಮಟ್ಟದಲ್ಲಿ ಚರ್ಚಿಸುವುದಾಗಿ ಕಾರ್ಯದರ್ಶಿಗಳು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿದ್ದು, ಜಾನುವಾರುಗಳಿಗೆ ಯಾವುದೇ ರೀತಿಯ ರೋಗ ರುಜಿನಗಳು ಕಂಡುಬಂದಿಲ್ಲ ಎಂದರಲ್ಲದೆ, ಈ ವರ್ಷ ಉತ್ತಮ ಮಳೆ-ಬೆಳೆಯಾಗಿರುವುದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ ಎಂದು ಪಶುಪಾಲನಾ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿರುವ ಹಾಸ್ಟೆಲ್ಗಳಿಗೆ ಅಗತ್ಯವಿರುವ ಪಿಠೋಪಕರಣಗಳ ಪಟ್ಟಿಯನ್ನು ಎರಡು ದಿನಗಳೊಳಗಾಗಿ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಮೆಟ್ರಿಕ್ ನಂತರದ ಹಾಸ್ಟೆಲ್ಗಳು ಆರಂಭವಾಗಿರುವ ಹಿನ್ನೆಲೆ ಕೋವಿಡ್-19 ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಕೇಳಿದಾಗ ಹಿಂದುಳಿದ ವರ್ಗ ಇಲಾಖೆ ಅಧಿಕಾರಿ ಮಾತನಾಡಿ ಇದುವರೆಗೂ 140 ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಹಿಂದುಳಿದ ವರ್ಗದ ಹಾಸ್ಟೆಲ್ನಲ್ಲಿ ಪ್ರವೇಶ ಪಡೆದಿದ್ದು, ಕೋವಿಡ್-19 ಪರೀಕ್ಷೆ ಮಾಡಿಸಲಾಗಿದೆ ಎಂದರಲ್ಲದೆ, ಪೋಷಕರ ಒಪ್ಪಿಗೆ ಪತ್ರ ಪಡೆದು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ಸೂಚಿಸಲಾಗಿದೆ. ಅಲ್ಲದೆ, ಕೋವಿಡ್-19 ನಿಯಮಾವಳಿಗಳ ಅನ್ವಯ ದಿನಕ್ಕೆರಡು ಬಾರಿ ದೇಹದ ಉಷ್ಣಾಂಶ ಪರೀಕ್ಷೆ ಮಾಡಲಾಗುತ್ತದೆ ಹಾಗೂ ಐಸೋಲೇಷನ್ ಕೋಣೆಯನ್ನು ಸಿದ್ಧ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ದೊಡ್ಡಬಳ್ಳಾಪುರ ಡಿವೈಎಸ್ಪಿ ಟಿ.ರಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

