
ಬೆಂ.ಗ್ರಾ.ಜಿಲ್ಲೆ: ಕೋವಿಡ್ ಲಸಿಕೆ ವಿತರಣೆ ಸಂಬಂಧಿಸಿದಂತೆ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಒಟ್ಟು 06 ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯಾದ್ಯಂತ ಲಸಿಕೆ ವಿತರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ರಮಕ್ಕಾಗಿ ಕೈಗೊಳ್ಳಲಾದ ಅಗತ್ಯ ಸಿದ್ಧತೆ ಕುರಿತಂತೆ ಮಾಹಿತಿ ನೀಡಿ ಅವರು ಮಾತನಾಡಿದರು.
ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳು 2021ರ ಜ.16 ರಂದು ಬೆಳಗ್ಗೆ 10:30 ಗಂಟೆಗೆ ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಅವರು ಚಾಲನೆ ನೀಡಲಿದ್ದಾರೆ ಎಂದರು.
ಜ.16 ರಿಂದ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದ್ದು, ಕೋವಿಡ್-19 ಲಸಿಕೆಗಾಗಿ ಆರೋಗ್ಯ ಕಾರ್ಯಕರ್ತರು, ಕೊರೋನಾ ವಾರಿಯರ್ಸ್ಗಳು ಸೇರಿದಂತೆ 12 ಸಾವಿರ ಜನರನ್ನು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ಹಂತದಲ್ಲಿ ಬೆಂಗಳೂರು ಗ್ರಾಮಾಂತರ 5500 ಲಸಿಕೆ ಸರಬರಾಜು ಆಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಆಯಾ ತಾಲ್ಲೂಕಿನ ಜನಪ್ರತಿನಿಧಿಗಳು ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಯಶಸ್ವಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಚುನಾವಣಾ ಮಾದರಿಯಲ್ಲಿ ಅಂದರೆ ಬೂತ್ ಮಟ್ಟದಲ್ಲಿ ಲಸಿಕೆಯನ್ನು ನೋಂದಣಿಯಾದವರಿಗೆ ಮಾತ್ರ ನೀಡಲಾಗುವುದು. ಜನವರಿ 16 ರಂದು ಕರೊನಾ ವಾರಿಯರ್ಸ್ಗಳಾದ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆಯನ್ನು ನೀಡಲಾಗುವುದು ಎಂದರು.
ಸಾರ್ವಜನಿಕರು ಯಾರು ಸಹ ಗೊಂದಲಕ್ಕೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೆ ಸಹಕರಿಸಲು ಕೋರಿದರು.
ಲಸಿಕೆ ವಿತರಣೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಲಸಿಕೆ ಪಡೆದವರ ಅವಲೋಕನಕ್ಕಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಲಸಿಕಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಆರೋಗ್ಯ ಇಲಾಖೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ, ಲಸಿಕೆಯನ್ನು ಲಸಿಕಾ ಕೇಂದ್ರಗಳಿಗೆ ಸುರಕ್ಷಿತವಾಗಿ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಜಿಲ್ಲೆಯಲ್ಲಿ ವಾರ್ ರೂಂ, ಕಂಟ್ರೋಲ್ ರೂಂ ಮತ್ತು ಮೀಡಿಯಾ ರೂಂ ತೆರೆಯಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಲಸಿಕೆ ನೀಡುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾದಲ್ಲಿ ವೈದ್ಯರ ತಂಡ ಸದಾ ಸಿದ್ಧವಾಗಿರುತ್ತದೆ. ಕೋವಿಡ್-19 ಲಸಿಕೆ ಕುರಿತ ಯಾವುದೇ ಸಮಸ್ಯೆಗಳಿದ್ದರೂ ಕಂಟ್ರೋಲ್ ರೂಮ್ಗೆ ಕರೆ ಮಾಡಬಹುದು ಹಾಗೂ ಹಾಕಲಾಗಿರುವ ಲಸಿಕೆಯ ಅಂಕಿ-ಅಂಶಗಳನ್ನು ಒಂದೆಡೆ ಕಲೆಹಾಕಿ, ರಾಜ್ಯ ಸರ್ಕಾರಕ್ಕೆ ಸಮಯಕ್ಕೆ ಸರಿಯಾಗಿ ಮಾಹಿತಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಲಸಿಕೆ ನೀಡಿಕೆಯಲ್ಲಿ ಫ್ರಂಟ್ಲೈನ್ ವರ್ಕರ್ಸ್ ಅಂದರೆ, ಆರೋಗ್ಯ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗುವುದು, ನಂತರದಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಪೌರ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಲಸಿಕೆ ವಿತರಣೆಗೆ ಅಗತ್ಯವಿರುವ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ, ಲಸಿಕೆಗೆ ನೋಂದಣಿ ಮಾಡಿಕೊಂಡವರು ಸಕಾಲಕ್ಕೆ ಬಂದು ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು. ಈ ಬಗ್ಗೆ ಯಾರೂ ಪೂರ್ವಗ್ರಹ ಪೀಡಿತರಾಗಿ ಗಾಬರಿಯಾಗಬಾರದು ಎಂದರಲ್ಲದೆ ವೈದ್ಯಾಧಿಕಾರಿಗಳ ತಂಡ ಲಸಿಕೆ ವಿತರಣಾ ಸ್ಥಳದಲ್ಲಿ ಇರಲಿದ್ದು, ಎಚ್ಚರ ವಹಿಸಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾಹಿತಿ ನೀಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

