
ಬೆಂ.ಗ್ರಾ.ಜಿಲ್ಲೆ: ಜಗತ್ತಿನ ಸಾಂಕ್ರಾಮಿಕ ರೋಗವಾಗಿ ಕಾಡಿದ ಕೋವಿಡ್-19 ಗೆ ಔಷಧಿಯನ್ನು ಇಂದು ದೇಶದಲ್ಲಿ ಏಕಕಾಲಕ್ಕೆ ನೀಡಲು ಆರಂಭಿಸಲಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅದೇ ಮಾದರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಜಿಲ್ಲಾ ಮಟ್ಟದ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ನಡೆದ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಕೋವಿಶೀಲ್ಡ್ ಲಸಿಕೆಯನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 06 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಕೋವಿಡ್-19 ಲಸಿಕೆಗಾಗಿ ಆರೋಗ್ಯ ಕಾರ್ಯಕರ್ತರು, ಕೊರೋನಾ ವಾರಿಯರ್ಸ್ಗಳು ಸೇರಿದಂತೆ 12 ಸಾವಿರ ಜನರನ್ನು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ಹಂತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 5500 ಲಸಿಕೆ ಸರಬರಾಜು ಆಗಿದ್ದು,
ಪ್ರತಿ ಲಸಿಕಾ ಕೇಂದ್ರದಲ್ಲೂ ಸಂಜೆ 5 ಗಂಟೆವರೆಗೂ 100 ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.
ಗರ್ಭಿಣಿಯರು ಹೊರತುಪಡಿಸಿ, 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುವುದು ಎಂದರಲ್ಲದೆ, ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಸಾರ್ವಜನಿಕರು ಯಾರು ಸಹ ಗೊಂದಲಕ್ಕೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೆ ಸಹಕರಿಸಲು ಕೋರಿದರಲ್ಲದೆ, ಮೊದಲ ಡೋಸ್ ಪಡೆದ 28 ನೇ ದಿನಕ್ಕೆ ಎರಡನೇ ಡೋಸ್ ನೀಡಲಾಗುವುದು ಎಂದು ತಿಳಿಸಿದರು.
ಲಸಿಕೆ ವಿತರಣೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಲಸಿಕೆ ಪಡೆದವರ ಅವಲೋಕನಕ್ಕಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ ಹಾಗೂ ಲಸಿಕಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಫಲಾನುಭವಿಗಳು ಲಸಿಕೆ ಪಡೆದ ಅರ್ಧ ಗಂಟೆ ನಂತರ ಮನೆಗೆ ತೆರಳಬಹುದು. ಜಿಲ್ಲೆಯಲ್ಲಿ ಲಸಿಕೆ ನೀಡುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾದಲ್ಲಿ ವೈದ್ಯರ ತಂಡ ಸದಾ ಸಿದ್ಧವಾಗಿರುತ್ತದೆ ಎಂದರು.
ಲಸಿಕೆ ನೀಡಿಕೆಯಲ್ಲಿ ಫ್ರಂಟ್ಲೈನ್ ವರ್ಕರ್ಸ್ ಅಂದರೆ, ಆರೋಗ್ಯ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ನಂತರದಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಪೌರ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು ಎಂದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಕೋವಿಡ್ ಎಂಬ ಮಹಾಮಾರಿಯನ್ನು ದೇಶದಿಂದ ನಿರ್ನಾಮ ಮಾಡಲು ಲಸಿಕೆ ಮುಂದಾಗಿರುವುದು ಶ್ಲಾಘನೀಯ ಎಂದರಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ನೀಡುವ ಬಗ್ಗೆ ಸಂವಾದ ನಡೆಸಿದ್ದು, ಇಂದು ಲಸಿಕೆ ನೀಡುತ್ತಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದರು.
ಪ್ರಸ್ತುತ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಜನ ಸಾಮಾನ್ಯರಿಗೂ ಉಚಿತವಾಗಿ ಲಸಿಕೆಯನ್ನು ನೀಡುವ ಕಾರ್ಯವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಆರೋಗ್ಯ ಇಲಾಖೆ ಉಪ ನಿರ್ದೇಶಕರು ಹಾಗೂ ಜಿಲ್ಲಾ ಲಸಿಕಾ ನೋಡಲ್ ಅಧಿಕಾರಿ ಡಾ.ಅರುಣ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕ್ಷಯಾ ರೋಗ ನಿಯಂತ್ರಣ ಘಟಕದ ಸಂಚಾಲಕಿ ಡಾ.ಶಕೀಲಾ, ದೇವನಹಳ್ಳಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಸಂಜಯ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

