
ದೊಡ್ಡಬಳ್ಳಾಪುರ: ಗ್ರಾಮೀಣ ಜನರಿಗೆ ಸರ್ಕಾರದ ಸೌಲಭ್ಯ ನೇರವಾಗಿ ತಲುಪಿಸಲು ಸೇತುವೆಯಾದ ಗ್ರಾಮಪಂಚಾಯಿತಿಗಳಿಗೆ ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ ಶಕ್ತಿ ತುಂಬಿದರು, ಆದರೆ ಇತ್ತೀಚಿನ ದಿನಗಳಲ್ಲಿ ಗ್ರಾಮಪಂಚಾಯಿತಿ ಚುನಾವಣೆಯ ಪರಿಸ್ಥಿತಿ ಬದಲಾವಣೆಯಾಗಿದೆ ಎಲ್.ಹನುಮಂತಯ್ಯ ಹೇಳಿದರು.
ಇತ್ತೀಚಿಗೆ ನಡೆದ ಗ್ರಾಮಪಂಚಾಯಿತಿ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಂಗ್ರೆಸ್ ಸಮಿತಿವತಿಯಿಂದ ಆಯೋಜಿಸಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮಪಂಚಾಯಿತಿಗಳನ್ನು ಸದೃಡಗೊಳಿಸುವ ಹೊಣೆ ಯುವ ಸದಸ್ಯರ ಮೇಲಿದೆ ಎಂದು ನೂತನ ಸದಸ್ಯರಿಗೆ ಕರೆ ನೀಡಿದರು. ಗ್ರಾಮಪಂಚಾಯಿತಿ ಚುನಾವಣೆಗಳ ಪರಿಸ್ಥಿತಿ ಬದಲಾವಣೆಯಾಗಿದೆ. ದೇಶದ ಗ್ರಾಮಪಂಚಾಯಿತಿಗಳಿಗೆ ಶಕ್ತಿ ತುಂಬಿದ ಕಾಂಗ್ರೆಸ್ ನಾಯಕರ ಉದ್ದೇಶವನ್ನು ಸಾಕಾರಗೊಳಿಸಬೇಕಿದೆ. ಮಹಿಳಾ ಮೀಸಲಾತಿ ಮೂಲಕ ಮಹಿಳೆಯರಿಗೆ ಒಲಿದು ಬಂದ ಅಧಿಕಾರವನ್ನು ಸದುಪಯೋಗ ಮಾಡಿಕೊಳ್ಳಬೇಕು. ಮಹಿಳೆಯರು ಪುರಷರಿಗಿಂತ ಕಡಿಮೆ ಏನೂ ಇಲ್ಲ. ಹೀಗಾಗಿ ಗ್ರಾಮಪಂಚಾಯಿತಿಗಳಲ್ಲಿ ಮಹಿಳೆಯ ಪಾತ್ರ ಹಿರಿಯದಿದೆ. ಈ ಪ್ರಜ್ಞೆಯ ಮೂಲಕ ಮಹಿಳೆಯರು ಕಾರ್ಯ ನಿರ್ವಹಿಸಲಿ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ತಾಲೂಕಿನಲ್ಲಿ ನಾನು ಶಾಸಕನಾದ ನಂತರ ಕುಂಟಿತವಾಗಿದ್ದ ಬಹುತೇಕ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿದ್ದೇನೆ. ಹೀಗಾಗಿ ತಾಲೂಕಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಳೆದ ಭಾರಿ ಮತ್ತು ಈ ಭಾರಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ತಾಲೂಕಿನ ಜನ ಗೆಲ್ಲಿಸಿಕೊಟ್ಟಿಕೊಟ್ಟಿದ್ದಾರೆ. ಹೀಗಾಗಿ ನೂತನ ಸದಸ್ಯರು ಗ್ರಾಮಗಳ ಅಭಿವೃದ್ಧಿಗೆ ಕಾಯಾ ವಾಚಾ ಮನಸ ಶ್ರಮಿಸುವ ಮೂಲಕ ಜನಗಳ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ನೂತನ ಸದಸ್ಯರಿಗೆ ಕಿವಿ ಮಾತು ಹೇಳಿದರು.
ವಿಧಾನ ಪರಿಷತ್ ಸದಸ್ಯ ರವಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ದೇಶದ ಅಭಿವೃದ್ಧಿಯಲ್ಲಿ ಅಡಿಪಾಯಗಳಾಗಿವೆ. ಈ ಹಂತದಲ್ಲಿ ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಕಾಣುವಲ್ಲಿ ಯಾವುದೇ ಸಂಶಯವಿಲ್ಲ. ಇಷ್ಟಕ್ಕೆ ಪಕ್ಷದ ಕಾರ್ಯಕರ್ತರು ಸಾಮಾಧಾನ ಮಾಡಿಕೊಳ್ಳದೆ ಪಕ್ಷವನ್ನು ಸದೃಡಗೊಳಿಸುವಲ್ಲಿ ಚುನಾಯಿತ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಚುಂಚೇಗೌಡ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೂರು ಬೈರೇಗೌಡ, ಟಿಪಿಎಂಸಿಎಸ್ ಅಧ್ಯಕ್ಷ ಸಿದ್ದರಾಮಣ್ಣ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮಿಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿತ್ಯ ನಾಗೇಶ್, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್(ಅಪ್ಪಿ), ಕಾಂಗ್ರೆಸ್ ಮುಖಂಡರಾದ ಅಪಕಾರನಹಳ್ಳಿ ಶ್ರೀನಿವಾಸ್, ರಾಮಣ್ಣ, ಅಂಜನಮೂರ್ತಿ, ಮುನಿರಾಜು, ಟಿ.ಡಿ.ಮುನಿಯಪ್ಪ ಸೇರಿದಂತೆ ವಿವಿಧ ಘಟಕಗಳ ಮುಖಂಡರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

