
ದೊಡ್ಡಬಳ್ಳಾಪುರ: ಕನ್ನಡಪರ ಹೋರಾಟಗಾರರನ್ನು ಸಾಹಿತ್ಯ ಸಮ್ಮೇಳ ಅಧ್ಯಕ್ಷರಾನ್ನಾಗಿ ಆಯ್ಕೆ ಮಾಡಿರುವುದು ತಪ್ಪು ಎಂದು ಹೇಳಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಿ.ಮಾ.ಸುಧಾಕರ್ ಹೋರಾಟಗಾರರ ಕ್ಷಮೆಯಾಚಿಸಬೇಕು ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದರು.
ಹೋರಾಟಗಾರರ ತೀವ್ರ ಆಕ್ರೋಶ ಹಿನ್ನೆಲೆ ತಾಲ್ಲೂಕು ಪಂಚಾಯಿತಿ ಭವನದಲ್ಲಿ ಸೋಮವಾರ ನಡೆದ 22ನೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ ಪೂರ್ವಭಾವಿ ಸಭೆಯಲ್ಲಿ ಕೆಲ ಸಮಯ ಬಿಗುವಿನ ವಾತಾವರಣ ಉಂಟಾಗಿತ್ತು.
ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕನ್ನಡಪರ ಹೋರಾಟಗಾರರ ಮಾತಿಗೆ ಗೌರವ ನೀಡದೆ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಚಿ.ಮಾ.ಸುಧಾಕರ್ ಕ್ಷಮೆಯಾಚಿಸದೆ ಸಭೆಯಿಂದ ಹೊರ ನಡೆದರು.
ಸಭೆಯಲ್ಲಿ ಮಾತನಾಡಿದ ಮುಖಂಡರಾದ ಮಂಜುನಾಥ್, ರಾಜುಸಣ್ಣಕ್ಕಿ, ಸಂಜೀವ್ ನಾಯಕ್, ಸಾಹಿತ್ಯ ಸಮ್ಮೇಳದಲ್ಲಿ ಹೊಸ ಕೃಷಿ ಕಾಯ್ದೆಗಳು, ರಾಜ್ಯದಲ್ಲಿ ಹಿಂದಿ ಭಾಷೆ ಏರಿಕೆ ಕುರಿತ ವಿಚಾರಗೋಷ್ಠಿಗಳು ನಡೆಯಬೇಕು ಎಂದು ಸಲಹೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರ ನಡವಳಿಕೆ ಖಂಡನೀಯವಾಗಿದೆ. ಸಾರ್ವಜನಿಕರ ಹಣ ಖರ್ಚು ಮಾಡುವಾಗ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿಟ್ಟುಕೊಳ್ಳುವುದು ಕಡ್ಡಾಯ. ಜಿಲ್ಲಾ ಸಾಹಿತ್ಯ ಸಮ್ಮೇಳಕ್ಕೆ ತಾಲ್ಲೂಕು ಆಡಳಿತದಿಂದ ₹1 ಲಕ್ಷ ನೆರವು ನೀಡಲಾಗುವುದು ಎಂದರು.
ಸಭೆಯಲ್ಲಿ ಮಾತನಾಡಿದ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಪ್ರಮೀಳಮಹಾದೇವ್, ಕೋವಿಡ್ ಕಾರಣದಿಂದಾಗಿ ಮುಂದೂಡಲ್ಲಪಟ್ಟಿದ 22ನೇ ಜಿಲ್ಲಾ ಸಾಹಿತ್ಯ ಸಮ್ಮೇಳ ಫೆಬ್ರವರಿ ಮೊದಲ ವಾರದಲ್ಲಿ ಬಸವ ಭವನದಲ್ಲಿ ನಡೆಯಲಿದೆ. ಈ ಹಿಂದೆಯೇ ನಿರ್ಧರಿಸಿದಂತೆಯೇ ಗೋಷ್ಠಿಗಳು ನಡೆಯಲಿವೆ. ಸಮ್ಮೇಳ ಅಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಎಲ್ಲಾ ಸಂಘಟನೆಗಳನ್ನು ಒಳಗೊಂಡಂತೆ ಸಮಿತಿ ರಚಿಸಿಕೊಂಡು ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲಾಗುವುದು ಎಂದರು.
ಪೂರ್ವಭಾವಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಇಒ ಮುರುಡಯ್ಯ ಹಾಗೂ ವಿವಿಧ ಸಂಘಟನೆಗಳ ಮೂಖಂಡರು ಭಾಗವಹಿಸಿದ್ದರು
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

