
ಬೆಂ.ಗ್ರಾ.ಜಿಲ್ಲೆ: ರಾಜ್ಯಾದ್ಯಂತ ಸಪ್ತಪದಿ ಯೋಜನೆ ಯಶಸ್ವಿಯಾಗಿ ನೆರವೇರುತ್ತಿದ್ದು, ಸರಳ ವಿವಾಹದಲ್ಲಿ ಹೆಚ್ಚು ಮಂದಿ ಪಾಲ್ಗೊಳ್ಳುತ್ತಿದ್ದಾರೆ. ಕರೋನಾ ಕಾರಣದಿಂದಾಗಿ ಸರಳ ವಿವಾಹ ಕಾರ್ಯಕ್ರಮ ವಿಳಂಭವಾಗಿ ನಡೆದಿದ್ದು, ಮುಂದಿನ ದಿನಗಳಲ್ಲಿ ಪ್ರತೀ ತಿಂಗಳು ದೇವಾಲಯಗಳಲ್ಲಿ ಸಪ್ತಪದಿ ಯೋಜನೆಯಡಿ ವಿವಾಹಗಳು ನೆರವೇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಡೆದ ಉಚಿತ ಸಾಮೂಹಿಕ ಸರಳ ವಿವಾಹ ಸಪ್ತಪದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಯಲ್ಲಿ ವಿವಾಹ ನಡೆಯುತ್ತಿರುವುದರಿಂದ ನವ ಜೋಡಿಗಳಿಗೆ ದೇವರ ಅನುಗ್ರಹ ಸಿಗಲಿ ಎಂದರು.
ಕೋವಿಡ್ ಸಂಕಷ್ಟದ ನಡುವೆಯೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮ ಬಜೆಟ್ ಮಂಡನೆ ಮಾಡಲಿದ್ದಾರೆ. ದೇವಾಲಯಗಳ ಅಭಿವೃದ್ಧಿ ಹಾಗೂ ಟ್ರಸ್ಟಿಗಳ ಸಂಖ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಬಜೆಟ್ ನಲ್ಲಿ ನಿರೀಕ್ಷಿಸಲಾಗಿದೆ ಎಂದು ಹೇಳಿದರು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸಪ್ತಪದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿಯಾಗಿದ್ದು, ವಿಧಾನಸಭಾ ವ್ಯಾಪ್ತಿಯ ದೇವಾಲಯಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಸರಳ ಸಾಮೂಹಿಕ ವಿವಾಹ ಸಪ್ತಪದಿ ಕಾರ್ಯಕ್ರಮದಲ್ಲಿ 47 ಜೋಡಿಗಳು ವಿವಾಹ ಜೀವನಕ್ಕೆ ಕಾಲಿಡುತ್ತಿದ್ದು, ವರನಿಗೆ ಹೂವಿನ ಹಾರಕ್ಕೆ ರೂ 5,000, ವಧುವಿಗೆ ವಸ್ತ್ರ ಮತ್ತು ಹೂವಿನ ಹಾರಕ್ಕಾಗಿ ರೂ.10,000 ಹಾಗೂ ನಲವತ್ತು ಸಾವಿರ ಮೌಲ್ಯದ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಸೇರಿದಂತೆ ವಧು-ವರರಿಗೆ ರೂ 55,000 ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರು ಮಾತನಾಡಿ, ಸರ್ಕಾರದಿಂದ ಸಪ್ತಪದಿ ಯೋಜನೆಯಡಿ ಸರಳ ವಿವಾಹಗಳು ನಡೆಯುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆನಂದ ಗುರೂಜಿ, ದೇವನಹಳ್ಳಿ ಶಾಸಕ ಶಾಸಕ ನಿಸರ್ಗ ನಾರಾಯಣಸ್ವಾಮಿ, ನೆಲಮಂಗಲ ಶಾಸಕರಾದ ಡಾ. ಶ್ರೀನಿವಾಸ ಮೂರ್ತಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಹೆಚ್.ಅಪ್ಪಯ್ಯಣ್ಣ, ಮುಜರಾಯಿ ಇಲಾಖೆ ಆಯುಕ್ತರಾದ ಕೆ.ಎ.ದಯಾನಂದ, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್,ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕರಿಯಪ್ಪ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಶಿವರಾಜ್, ಮುಜರಾಯಿ ಇಲಾಖೆ ತಹಶೀಲ್ದಾರ್ ಹೇಮಲತಾ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

