ಬೆಂಗಳೂರು, (ನ.28): ಮೀಸಲಾತಿ ಹೋರಾಟದ ಅಖಾಡಕ್ಕೆ ಒಕ್ಕಲಿಗ ಸಮುದಾಯವೂ ಧುಮುಕಿದೆ. ರಾಜ್ಯ ಒಕ್ಕಲಿಗರ ಸಂಘದಿಂದ ಭಾನುವಾರ ಪೂರ್ವಭಾವಿ ಸಭೆ ನಡೆಸಿ 2023ರ ಜನವರಿ 23 ರೊಳಗೆ ಹಾಲಿ ಶೇ 4 ನಿಂದ ಶೇ 12 ಅಥವಾ ಶೇ 15 ವರೆಗೆ ಮೀಸಲಾತಿ ಹೆಚ್ಚಿಸಲು ಗಡುವು ನೀಡಿದೆ.
ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಇಂದು ರಾಜ್ಯ ಒಕ್ಕಲಿಗ ಸಂಘದ ವತಿಯಿಂದ ಮೀಸಲಾತಿಗೆ ಒತ್ತಾಯಿಸಿ ಪಕ್ಷಾತೀತ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ನಿರ್ಮಲಾನಂದನಾಥ ಶ್ರೀಗಳು ಹಾಗೂ ನಂಜಾವಧೂತ ಶ್ರೀಗಳು ಸಮುದಾಯಕ್ಕೆ ಶೇ.15 ವರೆಗೆ ಮೀಸಲಾತಿ ಹೆಚ್ಚಿಸಲು ಸರ್ಕಾರಕ್ಕೆ ಒತ್ತಾಯಿಸಿದರು. ಅಷ್ಟಲ್ಲದೇ ಮುಂದಿನ ವರ್ಷದ ಜನವರಿ 23 ರೊಳಗೆ ಬೇಡಿಕೆ ಈಡೇರಿಸದಿದ್ದರೆ ಹೋರಾಟದ ಎಚ್ಚರಿಕೆಯನ್ನು ಸ್ವಾಮೀಜಿಗಳು ರವಾನಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಆರ್.ಅಶೋಕ್ಗೆ ಸಮುದಾಯದ ಪರವಾಗಿ ಶ್ರೀಗಳು ಬೇಡಿಕೆಯ ಮನವಿ ಪತ್ರ ಸಲ್ಲಿಸಿದರು. ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಆರ್.ಅಶೋಕ್, ಮೀಸಲಾತಿ ಹೆಚ್ಚಳ ಸೇರಿದಂತೆ ಸಮುದಾಯದ ಎಲ್ಲ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಮಾತಾಡಿ ಆದಷ್ಟು ಬೇಗ ಒಂದು ನಿರ್ಧಾರಕ್ಕೆ ಬರೋದಾಗಿ ಭರವಸೆ ನೀಡಿದರು.
ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಸಮುದಾಯ ನೀಡಿದ ಗಡುವಿನಲ್ಲಿ ಹೃದಯ ಶ್ರೀಮಂತಿಕೆ ಇರಬೇಕು. ಆದಾಗ್ಯೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಪರೋಕ್ಷವಾಗಿ ಗಡುವು ವಿಸ್ತರಿಸುವಂತೆ ಮನವಿ ಮಾಡಿದರು..
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ಸದಾ ಬೆಂಬಲಿಸುತ್ತೇನೆ. ಸಮುದಾಯ ಒಗ್ಗಟ್ಟಿಂದ ಹೋರಾಟ ತೀವ್ರಗೊಳಿಸಬೇಕು ಎಂದು ಕರೆಕೊಟ್ರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಪೆನ್ನು ಪೇಪರ್ ನನ್ನ ಕೈಗೆ ಕೊಡಿ ಎಂದು ತಾವು ಸಿಎಂ ಆಗಲು ಪರೋಕ್ಷವಾಗಿ ಸಮುದಾಯದ ಆಶೀರ್ವಾದ ಕೋರಿದರು. ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಈ ಅವಕಾಶವನ್ನು ಕಳೆದುಕೊಳ್ಳಲು ಹೋಗಬೇಡಿ ಎಂಬ ತಮ್ಮ ಎಂದಿನ ಹೇಳಿಕೆಯನ್ನು ಡಿಕೆಶಿ ಪುನರುಚ್ಚರಿಸಿದರು.
ಆಡಳಿತ ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಎಲ್ಲಿ ಬೇಕಾದರೂ ಏನಾದರೂ ನಾನು ಮಾತನಾಡಲು ಆಗುವುದಿಲ್ಲ. ಈ ವಿಚಾರಗಳನ್ನು ಎಲ್ಲಿ ಪ್ರಸ್ತಾಪ ಮಾಡಬೇಕೋ ಅಲ್ಲಿ ಖಂಡಿತ ಮಾಡುತ್ತೇವೆ ಎಂದು ಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದಗೌಡ ಹೇಳಿದರು.
ಒಕ್ಕಲಿಗ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದ ಕೆಲಸ ಮಾಡುವ ವಿಚಾರದಲ್ಲಿ ನಾವು ಸ್ವಲ್ಪ ಹಿಂದೆ ಉಳಿದ್ದಿದ್ದೇವೆ ಎಂದು ಒಪ್ಪಿಕೊಂಡರು.
ಸಭೆಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ರಾಜ್ಯಾಧ್ಯಕ್ಷ ಸಿ.ಎನ್.ಬಾಲಕೃಷ್ಣ, ಕರ್ನಾಟಕದಲ್ಲಿ ನಮ್ಮ ಸಮಾಜದ ಜನಸಂಖ್ಯೆ ಶೇ 21ಕ್ಕೂ ಹೆಚ್ಚಿದೆ. ಆದರೆ ಕೇವಲ ಶೇ 4 ರಷ್ಟು ಮೀಸಲಾತಿ ನೀಡಲಾಗಿದೆ. ನಾಡಿಗೆ ಆಹಾರ ಭದ್ರತೆ ನೀಡಿರುವುದು ನಮ್ಮ ಸಮಾಜ. ಜನಾಂಗದ ಹಿತದೃಷ್ಟಿಯಿಂದ ನಮ್ಮ ಸಮುದಾಯಕ್ಕೆ ಶೇ 15ರಷ್ಟು ಮೀಸಲಾತಿ ಹೆಚ್ಚಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಶೀಘ್ರ ಚರ್ಚೆ ಮಾಡಲಿ. ಪೂಜ್ಯ ಶ್ರೀಗಳು ಅಂತಿಮವಾಗಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಹೇಳಿದರು.
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ್, ಡಾ ಕೆ.ಸುಧಾಕರ್, ಕೆ.ಗೋಪಾಲಯ್ಯ, ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಶಾಸಕರಾದ ಎಂ.ಕೃಷ್ಣಪ್ಪ, ಡಾ.ರಂಗನಾಥ್, ಎಂಎಲ್ಸಿಗಳಾದ ರವಿ, ದಿನೇಶ್ ಗೂಳಿಗೌಡ ಪಾಲ್ಗೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

