ದೊಡ್ಡಬಳ್ಳಾಪುರ, ( ಆಗಸ್ಟ್.02); ಆಗಸ್ಟ್ 15ರಂದು ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಧ್ವಜಾರೋಹಣ, ನಿರೂಪಣೆ, ರಾಷ್ಟ್ರಗೀತೆ ಮೊದಲಾಗಿ ಕಾರ್ಯಕ್ರಮಗಳ ಸಿದ್ದತೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಯಾವುದೇ ಅಭಾಸಗಳಾಗದಂತೆ ನೋಡಿಕೊಳ್ಳಬೇಕಿದೆ.
ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸಿರುವ ಸಾಧಕರಿಗೆ ಸನ್ಮಾನ ವಿಚಾರದಲ್ಲಿ ಲೋಪ ಉಂಟಾಗದಂತೆ ಹಾಗೂ ಯಾವುದೇ ಒತ್ತಡಕ್ಕೆ ಮಣಿಯದೆ ಅರ್ಹರನ್ನು ಸನ್ಮಾನಿಸಬೇಕಿದೆ.
ಈ ಹಿಂದೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸನ್ಮಾನಿತರಾದವರಿಗೆ ಮತ್ತೆ ಸನ್ಮಾನ ಮಾಡುವುದು ಬೇಡ ಎಂದರು.
ಆಗಮಿಸುವ ಶಾಲಾ ಮಕ್ಕಳಿಗೆ ಉಪಹಾರ, ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ಧ್ವಜ ಸ್ಥಂಭ, ಹಾಗೂ ಧ್ವಜಕ್ಕೆ ಹಾನಿಯಾಗದಂತೆ ಎಚ್ಚರ ವಹಿಸಬೇಕಿದೆ.
ಕ್ರೀಡಾಂಗಣದ ಸ್ವಚ್ಚತೆ, ಸರ್ಕಾರಿ ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೋತ್ಸಾಹ, ಪ್ಲಾಸ್ಟಿಕ್ ಧ್ವಜ ನಿಷೇಧ ಮೊದಲಾಗಿ ಸಮಾರಂಭವನ್ನು ಶಿಸ್ತುಬದ್ದವಾಗಿ ಅರ್ಥಪೂರ್ಣವಾಗಿ ಆಚರಿಸುವಂತೆ ಸಲಹೆ ಸೂಚನೆಗಳನ್ನು ನೀಡಿದರು.
ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೌರಾಯುಕ್ತ ಕಾರ್ತಿಕ್ ಈಶ್ವರ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಅನೀಸ್, ತಾಲೂಕು ಪ್ರಭಾರಿ ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಸಾಧಕರಿಗೆ ಸನ್ಮಾನ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಸಾಧಕರು ತಮ್ಮ ಸಾಧನೆಯ ಮಾಹಿತಿ, ಹಾಗೂ ಸ್ವ ವಿವರಗಳನ್ನೊಳಗೊಂಡ ಅರ್ಜಿಯನ್ನು ಆ.12ರ ಒಳಗಾಗಿ ತಾಲೂಕು ಕಚೇರಿಗೆ ಸಲ್ಲಿಸಬೇಕಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

