ಬೆಂಗಳೂರು ಗ್ರಾಮಾಂತರ ಜಿಲ್ಲೆ; ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ (Millet price) ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಪಾಯಿಗಳು ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು.
ಖರೀದಿ ಕೇಂದ್ರಗಳ ನೋಂದಣಿಗೆ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್ ಗಳು, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ, ರೈತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಕೃಷಿ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ ಅಧಿಕಾರಿಗಳಿಗೆ ಸೂಚಿಸಿದರು.
ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು ಜನವರಿ ಮಾಹೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಶುರುವಾಗಲಿದೆ. ಹಾಗಾಗಿ ರೈತರಿಂದ ಖರೀದಿಸಿದ ರಾಗಿಯನ್ನು ಕ್ರೂಡಿಕರಿಸಿ ಶೇಖರಿಸಲು ಉಗ್ರಾಣಗಳು ವ್ಯವಸ್ಥಿತ ಗುಣಮಟ್ಟದಲ್ಲಿ ಇದೆಯೇ ಎಂದು ಪರಿಶೀಲಿಸಿ, ಅವಶ್ಯವಿದ್ದಲ್ಲಿ ಹೆಚ್ಚುವರಿ ಉಗ್ರಾಣಗಳನ್ನು ನಿಗದಿ ಪಡಿಸಿ ಎಂದರು.
ಇದನ್ನೂ ಓದಿ; garlic theft: ಬೆಳ್ಳುಳ್ಳಿ ಕಳ್ಳತನ ಮಾಡಿಕೊಂಡು ಹೋದ ಕಿಲಾಡಿಗಳು..!
ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫ್ರೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫ್ರೂಟ್ಸ್ ಐಡಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಜಿ.ಶಂಕರಮೂರ್ತಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು ಮತ್ತು ಇತರರು ಉಪಸ್ಥಿತರಿದ್ದರು.
ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು
ನೆಲಮಂಗಲ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.
ದೊಡ್ಡಬಳ್ಳಾಪುರ: ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್.
ದೇವನಹಳ್ಳಿ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕುರುಬರ ದೊಡ್ಡಿ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ದೇವನಹಳ್ಳಿ.
ಹೊಸಕೋಟೆ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.